ಕಾನ್ಪೂರ್ (ಪಿಟಿಐ): ಜೀವರಸಾಯನಶಾಸ್ತ್ರ ಪರೀಕ್ಷೆಯಲ್ಲಿ ಅನುತ್ತಿರ್ಣರಾದ ಹಿನ್ನೆಲೆಯಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಇಲ್ಲಿನ ಗಣೇಶ ಶಂಕರ್ ವೈದ್ಯಕೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ಇವರು ಪ್ರಥಮ ವರ್ಷದ ಜೀವ ರಸಾಯನಶಾಸ್ತ್ರ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು. ಇದರಿಂದ ಮನನೊಂದ ವಿದ್ಯಾರ್ಥಿಗಳು ಹಾಸ್ಟಲ್ ಗೆ ತೆರಳಿ ತಮ್ಮ ಕೊಠಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ ಎನ್ನಲಾಗಿದೆ.
ವಿದ್ಯಾರ್ಥಿಗಳನ್ನು ಶೋಭಿತ್, ಸಂಜೀವ್ ಕುಮಾರ್ ಮತ್ತು ವಿವೇಕ್ ಎಂದು ಗುರುತಿಸಲಾಗಿದ್ದು, ಇವರು ತಮ್ಮ ಕೊಠಡಿಯಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದಾಗ ಅವರ ಸಹಪಾಠಿಗಳು ಅವರನ್ನು ಇಲ್ಲಿನ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಕಾಲೇಜಿನ ಉಪನ್ಯಾಸಕರು ಉದ್ದೇಶಪೂರ್ವಕವಾಗಿಯೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ವಿಚಾರಣೆ ಮುಂದುವರೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.