ನವದೆಹಲಿ: ರಜಾ ದಿನಗಳಲ್ಲಿಯೂ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುವ ಸಾಧ್ಯತೆಯನ್ನು ಪರಿಶೀಲನೆಗೆ ಒಳಪಡಿಸಬೇಕಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ವಿಶೇಷ ಕಾರ್ಯದರ್ಶಿ ರೀನಾ ರೇ ಹೇಳಿದ್ದಾರೆ.
ಉತ್ತರಾಖಂಡದಲ್ಲಿ ಇತ್ತೀಚೆಗೆ ಮೃತಪಟ್ಟ 11 ವರ್ಷದ ಬಾಲಕಿಯ ಪ್ರಕರಣವನ್ನು ಅವರು ಉಲ್ಲೇಖಿಸಿದರು. ಆ ಬಾಲಕಿಗೆ ಬಿಸಿಯೂಟ ನಿರಾಕರಿಸಿರಲಿಲ್ಲ. ಆದರೆ, ಶಾಲೆ ರಜೆ ಇದ್ದುದರಿಂದ ಬಿಸಿಯೂಟ ದೊರೆತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಹಸಿವಿನಿಂದಾಗಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆಕೆಯ ಮನೆಯವರು ಹೇಳಿದ್ದರು. ಸಾವಿಗೆ ಕಾರಣ ಮಲೇರಿಯಾ ಎಂಬುದು ಅಧಿಕಾರಿಗಳ ವಾದವಾಗಿದೆ.
1–8ನೇ ತರಗತಿ ವರೆಗೆ ಕಲಿಯುತ್ತಿರುವ 6–14 ವರ್ಷದ ಎಲ್ಲ ಮಕ್ಕಳಿಗೆ ಬಿಸಿಯೂಟ ಯೋಜನೆ ಅಡಿಯಲ್ಲಿ ಮಧ್ಯಾಹ್ನದ ಊಟ ಒದಗಿಸಲಾಗುತ್ತಿದೆ. ಈ ಊಟದಲ್ಲಿ ನಿಗದಿತ ಪೌಷ್ಟಿಕಾಂಶಗಳು ಇರುವಂತೆಯೂ ನೋಡಿಕೊಳ್ಳಲಾಗುತ್ತಿದೆ. ಈ ಯೋಜನೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಅಡಿಯಲ್ಲಿ ಬರುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.