ರಾಯಪುರ್ (ಪಿಟಿಐ): ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಬಿಜೆಪಿಯನ್ನು ಅಧಿಕಾರದ ದಡಕ್ಕೆ ಮುಟ್ಟಿಸಿದ ಮುಖ್ಯಮಂತ್ರಿ ಅಭ್ಯರ್ಥಿ ರಮಣ್ ಸಿಂಗ್ ಅವರು ಗುರುವಾರ ಸತತ ಮೂರನೇ ಬಾರಿಗೆ ಛತ್ತೀಸಗಡ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಭಾರಿ ಬಿಗಿಭದ್ರತೆಯ ನಡುವೆ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಸಿಂಗ್ ಅವರು ರಾಜ್ಯಪಾಲ ಶೇಖರ್ ದತ್ತ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಮಧ್ಯಪ್ರದೇಶ ಮಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾಗವಹಿಸಿದ್ದರು.
ಅಲ್ಲದೇ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಛತ್ತೀಸಗಡ ಮಾಜಿ ಮುಖ್ಯಮಂತ್ರಿ ಅಜೀತ್ ಜೋಗಿ ಮತ್ತು ಬಿಜೆಪಿ ಮುಖಂಡರಾದ ವಸುಂಧರಾ ರಾಜೆ ಸಿಂಧಿಯಾ ಅವರು ಸೇರಿದಂತೆ ಬಿಜೆಪಿ ಅನೇಕ ಮುಖಂಡರು ಭವ್ಯ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.