ಕೊಟ್ಟಾಯಂ (ಪಿಟಿಐ): ಶಬರಿಮಲೆಯಲ್ಲಿ ಯಾತ್ರಾರ್ಥಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ನೆರವು ನೀಡುವಂತೆ ಕೇಂದ್ರವನ್ನು ಒತ್ತಾಯಿಸಿರುವ ಎಲ್ಡಿಎಫ್ ಸರ್ಕಾರದ ಧೋರಣೆ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಎಂದು ಕಾಂಗ್ರೆಸ್ ಮುಖಂಡ ಉಮ್ಮನ್ ಚಾಂಡಿ ಕೇರಳದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
‘ಈ ದುರಂತದಲ್ಲಿ 102 ಮಂದಿ ಅಸುನೀಗಿದ್ದರೂ ರಾಜ್ಯ ಸರ್ಕಾರ ಈವರೆಗೂ ದುರಂತದ ಹೊಣೆಗಾರಿಕೆಯನ್ನು ಹೊತ್ತುಕೊಂಡಿಲ್ಲ. ಬದಲಿಗೆ ಪುಲ್ಮೇಡು ಪ್ರದೇಶ ಪೆರಿಯಾರ್ ಹುಲಿ ಯೋಜನೆ ಸಂರಕ್ಷಿತ ಅರಣ್ಯಕ್ಕೆ ಒಳಪಡುವ ಕಾರಣ ಅದು ಕೇಂದ್ರ ಸರ್ಕಾರದ ಅಧೀನಕ್ಕೆ ಬರುತ್ತದೆ. ಅದ್ದರಿಂದ ಅಲ್ಲಿ ಯಾತ್ರಾರ್ಥಿಗಳಿಗೆ ಸೌಕರ್ಯ ಕಲ್ಪಿಸಲು ಕೇಂದ್ರ ನೆರವು ನೀಡಬೇಕು ಎಂದು ಒತ್ತಾಯಿಸಿ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಹೊರಟಿದೆ’ ಎಂದು ಅವರು ಟೀಕಿಸಿದ್ದಾರೆ.
ಈ ಮಧ್ಯೆ, ರಾಜ್ಯ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ‘ಕೇರಳ ವಿಮೋಚನಾ’ ಯಾತ್ರೆಯು ಪೆರಿಂತಲ್ಮಣ್ನಲ್ಲಿ ಮಂಗಳವಾರ ಆರಂಭವಾಗಲಿದೆ. ದುರಂತದ ಕಾರಣ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚಾರಣೆ ಘೋಷಿಸಿದ್ದರಿಂದ ಈ ಯಾತ್ರೆಯನ್ನು ಮುಂದೂಡಲಾಗಿತ್ತು. ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಆರ್.ಎಸ್.ಗವಾಯ್ ಅವರಿಗೆ ಫೆ. 7ರಂದು ಮನವಿ ಸಲ್ಲಿಸಲಾಗುವುದು ಎಂದು ಚಾಂಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.