ADVERTISEMENT

ಲೋಕಾಯುಕ್ತ ನೇಮಕ: ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2012, 19:30 IST
Last Updated 19 ಜನವರಿ 2012, 19:30 IST

ನವದೆಹಲಿ (ಪಿಟಿಐ): ಎಂಟು ವರ್ಷಗಳಿಂದ ಖಾಲಿಯಿದ್ದ ಲೋಕಾಯುಕ್ತ ಹುದ್ದೆಗೆ ಆರ್.ಎ.ಮೆಹ್ತಾ ಅವರನ್ನು ನೇಮಕ ಮಾಡಿದ ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದ ಗುಜರಾತ್ ಹೈಕೋರ್ಟಿನ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಲೋಕಾಯುಕ್ತರನ್ನು ನೇಮಕ ಮಾಡಿದ ರಾಜ್ಯಪಾಲರ ಕ್ರಮ ಸಂವಿಧಾನ ಬದ್ಧವಾಗಿದೆ ಎಂದು ಬುಧವಾರ ಗುಜರಾತ್ ಹೈಕೋರ್ಟಿನ ನ್ಯಾಯಮೂರ್ತಿ ವಿ ಎಂ ಸಹಾಯ್ ಹೇಳುವ ಮೂಲಕ ನರೇಂದ್ರ ಮೋದಿ ಸರ್ಕಾರಕ್ಕೆ ಹಿನ್ನಡೆಯಾಗುವಂತೆ ಮಾಡಿದ್ದರು. ಜತೆಗೆ ಲೋಕಾಯುಕ್ತ ನೇಮಕ ಸಂಬಂಧ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಲೇವಡಿಯನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿ, `ಇದು ಉತ್ತಮ ಬೆಳವಣಿಗೆಯಲ್ಲ. ಬದಲಾಗಿ ಪ್ರಜಾಪ್ರಭುತ್ವಕ್ಕೆ ಮಾರಕ~ ಎಂದೂ ಕಿಡಿಕಾರಿದ್ದರು.

ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಕೇಳದೇ ರಾಜ್ಯಪಾಲರು ಲೋಕಾಯುಕ್ತರನ್ನು ನೇಮಕ ಮಾಡಿದ ಕ್ರಮವನ್ನು ವಿರೋಧಿಸಿದ್ದ ನರೇಂದ್ರ ಮೋದಿ ಸರ್ಕಾರ, ಮರು ದಿನವೇ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿತ್ತು.

ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ ಭಿನ್ನ ಅಭಿಪ್ರಾಯಗಳನ್ನು ನೀಡಿತ್ತು. ಹಾಗಾಗಿ ಅಂತಿಮ ತೀರ್ಪು ನೀಡಲು ಪ್ರಕರಣವನ್ನು ಸಹಾಯ್ ಅವರ ಪೀಠಕ್ಕೆ ವರ್ಗಾವಣೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.