ನವದೆಹಲಿ (ಪಿಟಿಐ): ಕ್ಯಾಸ್ಟಿಂಗ್ ಕೌಚ್ ವಿರುದ್ಧ ದನಿಎತ್ತಿ ನಟಿ ಶ್ರೀರೆಡ್ಡಿ ಅವರು ಅರೆನಗ್ನವಾಗಿ ಪ್ರತಿಭಟನೆ ಮಾಡಿದ ಸಂಬಂಧ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹಾಗೂ ತೆಲಂಗಾಣ ಸರ್ಕಾರಕ್ಕೆ ಸೂಚಿಸಿದೆ.
ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿ, ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಶ್ರೀರೆಡ್ಡಿ ಶನಿವಾರ ಪ್ರತಿಭಟನೆ ನಡೆಸಿದ್ದರು.
ನಾಲ್ಕು ವಾರಗಳ ಒಳಗೆ ಘಟನೆಯ ವರದಿ ನೀಡುವಂತೆ ತೆಲಂಗಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಗೆ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಸೂಚಿಸಿದೆ.
ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇಲೆ ಶ್ರೀರೆಡ್ಡಿ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶ್ರೀರೆಡ್ಡಿ ಚಲನಚಿತ್ರಗಳಲ್ಲಿ ಅಭಿನಯಿಸುವುದು ಮತ್ತು ಇತರೆ ಕಲಾವಿದರೊಂದಿಗೆ ಕೆಲಸ ಮಾಡುವುದನ್ನು ನಿಷೇಧಿಸಿರುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಆಯೋಗ, ‘ನಟಿ ಮೇಲಿನ ನಿರ್ಬಂಧವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಜೀವನೋಪಾಯಕ್ಕಾಗಿ ಉದ್ಯೋಗ ಮಾಡುವ ಹಕ್ಕು ಕಸಿಯುವುದು ಮತ್ತು ವೈಯಕ್ತಿಕ ಘನತೆ ಕಳೆಯುವುದು ಸರಿಯಿಲ್ಲ’ ಎಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.