ನವದೆಹಲಿ (ಪಿಟಿಐ/ ಐಎಎನ್ಎಸ್): ದೆಹಲಿಯಲ್ಲಿ ಸರ್ಕಾರ ರಚಿಸಲು ಆಮ್ ಆದ್ಮಿ ಪಕ್ಷ (ಎಎಪಿ) ಸಿದ್ಧವಿದೆ ಎಂದು ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕಳೆದೆರಡು ವಾರಗಳ ರಾಜಕೀಯ ಬಿಕ್ಕಟ್ಟಿಗೆ ತೆರೆ ಬಿದ್ದಿದೆ.
ಅಲ್ಲದೇ ಈ ಸಂಬಂಧ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ ಅವರನ್ನು ಭೇಟಿ ಮಾಡುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.
ಮತ್ತೊಂದೆಡೆ ಕೇಜ್ರಿವಾಲ್ ದೆಹಲಿಯ ನೂತನ ಮುಖ್ಯಮಂತ್ರಿ ಎಂದು ಎಎಪಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.
ಜೊತೆಗೆ ಜಂಗ ಅವರು ಪರವಾನಗಿ ನೀಡಿದರೇ ಜಂತರ್ ಮಂತರ್ನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದೂ ಅವರು ತಿಳಿಸಿದ್ದಾರೆ.
ಶೀಲಾ ಸ್ವಾಗತ: ಸರ್ಕಾರ ರಚಿಸುವ ಎಎಪಿ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸ್ವಾಗತಿಸಿದ್ದಾರೆ. ಅಲ್ಲದೇ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಎಎಪಿ ಈಡೇರಿಸಲಿದೆ ಎಂದೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜನತಾ ತೀರ್ಪಿಗೆ ನಂಬಿಕೆ ದ್ರೋಹ: ಕಾಂಗ್ರೆಸ್ ಬೆಂಬಲದೊಂದಿಗೆ ಎಎಪಿ ಸರ್ಕಾರ ರಚನೆಗೆ ಮುಂದಾಗಿರುವುದು ತಮ್ಮ ತತ್ವಗಳನ್ನು ರಾಜಿ ಮಾಡಿಕೊಂಡಂತೆ ಹಾಗೂ ಜನತಾ ತೀರ್ಪಿಗೆ ದ್ರೋಹ ಬಗೆದಂತೆ ಎಂದು ಬಿಜೆಪಿ ಮುಖಂಡ ಹರ್ಷವರ್ಧನ್ ಕಟುವಾಗಿ ಟೀಕಿಸಿದ್ದಾರೆ.
ಹಿನ್ನೆಲೆ: ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದೆಹಲಿ ಅತಂತ್ರ ಫಲಿತಾಂಶ ಕಂಡಿತ್ತು. 31 ಸ್ಥಾನ ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ, ಸರಳ ಬಹುಮತದ (36) ಕೊರತೆಯಿಂದಾಗಿ ಸರ್ಕಾರ ರಚನೆಗೆ ನಿರಾಕರಿಸಿತ್ತು. 8 ಸ್ಥಾನಕ್ಕೆ ಕುಸಿದಿದ್ದ ಕಾಂಗ್ರೆಸ್, ಎಎಪಿಗೆ ಬೇಷರತ್ತು ಬೆಂಬಲ ನೀಡುವುದಾಗಿ ಘೋಷಿಸಿತ್ತು. ಅದಾಗ್ಯೂ ಎಎಪಿ, ಸರ್ಕಾರ ರಚನೆಗೆ ಜನಾಭಿಪ್ರಾಯ ಸಂಗ್ರಹ ನಡೆಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.