ನವದೆಹಲಿ (ಪಿಟಿಐ): ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಪಡೆಯು ಮೂಲಕ 2ನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಕ್ಷ (ಎಎಪಿ), ತಾನು ಸರ್ಕಾರ ರಚಿಸುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಈ ಕುರಿತು ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಪಕ್ಷದ ಮುಖಂಡ ಯೋಗೇಂದ್ರ ಯಾದವ್, ‘ಸರ್ಕಾರ ರಚನೆಗೆ ಬೇಕಾದ ಸ್ಥಾನಗಳನ್ನು ನಮ್ಮ ಪಕ್ಷ ಪಡೆದಿಲ್ಲ. ಹಾಗಾಗಿ ನಾವು ಸರ್ಕಾರ ರಚಿಸುವುದಿಲ್ಲ’ ಎಂದು ಹೇಳಿದರು.
‘ಅಲ್ಲದೆ, ಈ ಸಂಬಂಧ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸರ್ಕಾರ ರಚನೆಗೆ ಆಹ್ವಾನ ನೀಡಿರುವ, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜುಂಗ್ ಅವರನ್ನು ಭೇಟಿ ಮಾಡಿ, ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ’ ಎಂದು ತಿಳಿಸಿದರು.
ಚುನಾವಣೆಯಲ್ಲಿ ಅತಿ ಹೆಚ್ಚು (31) ಸ್ಥಾನಗಳನ್ನು ಪಡೆದಿರುವ ಬಿಜೆಪಿ ಕೂಡ ತನಗೆ ಸ್ಪಷ್ಟ ಬಹುಮತ ಇಲ್ಲದ ಕಾರಣ, ತಾನು ಸರ್ಕಾರ ರಚಿಸುವುದಿಲ್ಲ. ಬದಲಾಗಿ, ಪ್ರತಿಪಕ್ಷ ಸ್ಥಾನದಲ್ಲಿ ಕೂರಲು ಸಿದ್ಧ ಎಂದು ಗುರುವಾರ ಸ್ಪಷ್ಟಪಡಿಸಿತ್ತು.
ದೆಹಲಿ ವಿಧಾನಸಭೆಯು ಒಟ್ಟು 70 ಸ್ಥಾನಗಳನ್ನು ಹೊಂದಿದ್ದು, ಸರ್ಕಾರ ರಚನೆಗೆ ಬಹುಮತವಾಗಿ 36 ಶಾಸಕರ ಬೆಂಬಲ ಅಗತ್ಯವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.