ನವದೆಹಲಿ (ಪಿಟಿಐ) : ಕಳಂಕಿತ ಜನಪ್ರತಿನಿಧಿಗಳ ಸದಸ್ಯತ್ವ ರದ್ದುಪಡಿಸುವ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಸೇರಿದಂತೆ ಹಲವು ಪಕ್ಷಗಳು ಬುಧವಾರ ಇಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದವು.
ಕೇಂದ್ರ ಸರ್ಕಾರದ ನಡೆಯು `ಅಸಂವಿಧಾನಿಕ ಮತ್ತು ಅನೈತಿಕ ಮಾರ್ಗದಿಂದ ಕೂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಯಶವಂತ ಸಿನ್ಹಾ ಕಿಡಿಕಾರಿದರು.
ಅಲ್ಲದೆ, ಸುಪ್ರೀಂ ತೀರ್ಪಿನ ವಿರುದ್ಧ ಸರ್ಕಾರಕ್ಕೆ ಯಾವುದೇ ಆಕ್ಷೇಪವಿದ್ದರೆ ಪುನರ್ ಪರಿಶೀಲಿಸುವಂತೆ ಮನವಿ ಮಾಡಿಕೊಳ್ಳಬೇಕು. ಆದರೆ ಇಂತಹ ಪ್ರಕರಣದಲ್ಲಿ ಪುನರ್ ಪರಿಶೀಲನೆಯೂ ಅವಶ್ಯಕವಿಲ್ಲ. ಇಂದು ರಾಜಕೀಯದ ಗುಣಮಟ್ಟ ಕ್ಷೀಣಿಸುತ್ತಿರುವುದು ಮತ್ತು ರಾಜಕಾರಣದಲ್ಲಿನ ಅಪರಾಧೀಕರಣದಿಂದಾಗಿ ರಾಜಕಾರಣಿಗಳೆಲ್ಲರೂ ತಲೆತಗ್ಗಿಸುವಂತಾಗಿದೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಿನ್ಹಾ ಅವರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದರು.
'ಕಳಂಕಿತರ ರಕ್ಷಣೆಗೆ ಸುಪ್ರೀಂ ಕೋರ್ಟ್ ತೀರ್ಪನ್ನು ನಿರರ್ಥಕಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ತೀರ್ಮಾನಿಸಿದೆ. ಆದರೆ ಇದಕ್ಕೆ ನಮ್ಮ ವಿರೋಧವಿದೆ. ಸುಗ್ರೀವಾಜ್ಞೆಗೆ ಸಹಿ ಹಾಕದಂತೆ ರಾಷ್ಟ್ರಪತಿಗೆ ಮನವಿ ಮಾಡುತ್ತೇವೆ' ಎಂದು ಲೋಕಸಭೆಯ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಸುಗ್ರೀವಾಜ್ಞೆ ಹೊರಡಿಸುವ ವಿಷಯದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕಿದೆ ಎಂದು ಸಿಪಿಐ(ಎಂ) ಪಕ್ಷದ ಮುಖಂಡ ಸೀತಾರಾಂ ಯಚೂರಿ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.