ನವದೆಹಲಿ (ಐಎಎನ್ಎಸ್): ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮುಕೇಶ್ ಸಿಂಗ್ ಸಂದರ್ಶನವಿರುವ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ‘2102ರ ಡಿಸೆಂಬರ್ 16ರಂದು ನಡೆದ ಘಟನೆ ಖಂಡನೀಯ ಮತ್ತು ಆ ಘಟನೆಯಿಂದ ಲಾಭ ಮಾಡಿಕೊಳ್ಳಲು ಸರ್ಕಾರ ಯಾರಿಗೂ ಅವಕಾಶ ನೀಡುವುದಿಲ್ಲ’ ಎಂದು ಹೇಳಿದ್ದಾರೆ.
‘ಬಿಬಿಸಿ ವಾಹಿನಿಯು ಅಂತರರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8ರಂದು ಆ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಲು ಉದ್ದೇಶಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಆ ಸಾಕ್ಷ್ಯಚಿತ್ರ ಪ್ರಸಾರವನ್ನು ತಡೆಹಿಡಿಯಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ಬಿಬಿಸಿ ವಾಹಿನಿಯ ಸಾಕ್ಷ್ಯಚಿತ್ರಕ್ಕಾಗಿ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮುಕೇಶ್ ಸಿಂಗ್ ಸಂದರ್ಶನಕ್ಕೆ ಅನುಮತಿ ನೀಡಿದ ತಿಹಾರ್ ಜೈಲಿನ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಪಕ್ಷ ಸದಸ್ಯರು ಬುಧವಾರ ರಾಜ್ಯಸಭೆಯಲ್ಲಿ ಪಟ್ಟು ಹಿಡಿದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.