ಜಮ್ಮು(ಪಿಟಿಐ): ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ(ಪಿಡಿಪಿ) ಮುಖ್ಯಸ್ಥ ಮುಫ್ತಿ ಮೊಹಮ್ಮದ್ ಸಯೀದ್ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ 49 ದಿನಗಳ ರಾಜ್ಯಪಾಲರ ಆಡಳಿತ ತೆರೆ ಕಂಡಿತು.
ರಾಜ್ಯಪಾಲರಾದ ಎನ್. ಎನ್. ವೊಹ್ರಾ ಅವರು ಸಯೀದ್ ಅವರಿಗೆ ಅಧಿಕಾರ ಗೌಪ್ಯತೆ ಹಾಗೂ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಉಪಸ್ಥಿತರಿದ್ದರು.
ಸಯೀದ್ ಅವರ ಬಳಿಕ ಬಿಜೆಪಿಯ ನಿರ್ಮಲ್ ಸಿಂಗ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಪಿಡಿಪಿಯ 12 ಹಾಗೂ ಬಿಜೆಪಿ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಮಾರಂಭಕ್ಕೆ ನ್ಯಾಷನಲ್ ಕಾನ್ಫೆರೆನ್ಸ್ ಹಾಗೂ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಶಾಸಕರು ಗೈರು ಹಾಜರಾಗಿದ್ದರು.
ಪ್ರಮಾಣ ವಚನ ಸ್ವೀಕಾರದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಯೀದ್ ಹಾಗೂ ಸಿಂಗ್, 16 ಪುಟಗಳ 'ಮೈತ್ರಿ ಕಾರ್ಯಸೂಚಿ'ಯನ್ನು ಬಿಡುಗಡೆಗೊಳಿಸಿದರು. ಸಂವಿಧಾನದ 370ನೇ ಕಲಂ ಬಗ್ಗೆ ಯಥಾಸ್ಥಿತಿ ಕಾಯ್ದುಕೊಳ್ಳುವುದೂ ಮೈತ್ರಿ ಕಾರ್ಯಸೂಚಿಯಲ್ಲಿ ಸೇರಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.