ADVERTISEMENT

ಆಯುಷ್ಮಾನ್‌ ಭಾರತ ವಿಲೀನ ಬೇಡ: ಲೋಕಸಭೆಯಲ್ಲಿ ಸಂಸದೆ ಶೋಭಾ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಜುಲೈ 2019, 19:22 IST
Last Updated 1 ಜುಲೈ 2019, 19:22 IST

ನವದೆಹಲಿ: ಬಡಜನರ ಚಿಕಿತ್ಸೆಗೆ ನೆರವಾಗಲು ಕೇಂದ್ರ ಸರ್ಕಾರ ಆರಂಭಿಸಿರುವ ‘ಆಯುಷ್ಮಾನ್ ಭಾರತ’ ಯೋಜನೆಯನ್ನು ರಾಜ್ಯ ಸರ್ಕಾರದ ‘ಆರೋಗ್ಯ ಕರ್ನಾಟಕ’ ಕಾರ್ಯಕ್ರಮದಿಂದ ಹೊರಗಿರಿಸಲು ಕ್ರಮ ಕೈಗೊಳ್ಳುವಂತೆ ಉಡುಪಿ–ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು.

ಲೋಕಸಭೆಯಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಕೇಂದ್ರದ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಿರುವ ಯೋಜನೆ ಅಡಿ ವಿಲೀನಗೊಳಿಸಿ, ಕೆಲವು ನಿಯಮ ರೂಪಿಸಿದ್ದರಿಂದ ಬಡಜನರಿಗೆ ತೀವ್ರ ಸಮಸ್ಯೆ ಎದುರಾಗಿದೆ ಎಂದು ಆರೋಪಿಸಿದರು.

ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿ ಪರೀಕ್ಷೆಗೆ ಒಳಪಟ್ಟ ನಂತರವಷ್ಟೇ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಬೇಕು ಎಂಬ ನಿಯಮವನ್ನು ಕರ್ನಾಟಕ ಸರ್ಕಾರ ರೂಪಿಸಿದೆ. ಇದರಿಂದಾಗಿ ಪ್ರತಿ ವ್ಯಕ್ತಿಗೆ ₹ 5 ಲಕ್ಷದ ಚಿಕಿತ್ಸಾ ನೆರವು ನೀಡುವ ಕೇಂದ್ರದ ಯೋಜನೆಯ ಉಪಯೋಗ ಪಡೆಯಲು ಜನರು ಪರದಾಡುವಂತಾಗಿದೆ ಎಂದು ಅವರು ಹೇಳಿದರು.

ADVERTISEMENT

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯದ ಕೊರತೆ ಇರುವುದರಿಂದ ರೋಗಿಗಳು ಶಸ್ತ್ರಚಿಕಿತ್ಸೆಗೆ ಒಳಪಡಲು ವಿಳಂಬವಾಗುತ್ತಿದೆ. ಕೇಂದ್ರದ ಆರೋಗ್ಯ ಸಚಿವರು ಕೂಡಲೇ ರಾಜ್ಯ ಸರ್ಕಾರದ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ, ರಾಜ್ಯದ ಜನತೆಗೆ ಸುಲಭವಾಗಿ ಅಗತ್ಯ ಚಿಕಿತ್ಸಾ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಈ ಕುರಿತು ಎದುರಾಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಅವರು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.