ಷಹಜಹಾನ್ಪುರ (ಉತ್ತರ ಪ್ರದೇಶ): ಇಲ್ಲಿನ ಬಿರ್ಸಿನಾಗ್ಪುರ ಗ್ರಾಮದ ಬಳಿ ಶನಿವಾರ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಸೇತುವೆ ಮೇಲಿಂದ ನದಿಗೆ ಉರುಳಿ ಬಿದ್ದ ಪರಿಣಾಮ ಎಂಟು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ.
ಗ್ರಾಮದಲ್ಲಿ ಭಾಗವತ್ ಕಥಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದಕ್ಕೆ ಘಾರಾ ನದಿಯಿಂದ ನೀರು ತರಲು ಗ್ರಾಮಸ್ಥರು ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. 24 ಮಂದಿ ಗಾಯಗೊಂಡಿದ್ದು, ಈ ಪೈಕಿ ಏಳು ಜನರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟವರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರವು ತಲಾ ₹ 2 ಲಕ್ಷ ಹಾಗೂ ತೀವ್ರ ಗಾಯಗೊಂಡವರಿಗೆ ₹ 50 ಸಾವಿರ ಪರಿಹಾರ ಘೋಷಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಬಗ್ಗೆ ಅಗತ್ಯ ಕ್ರಮವಹಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.