ನವದೆಹಲಿ (ಪಿಟಿಐ): ಅಯೋಧ್ಯೆಯ ರಾಮ ಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದಕ್ಕೆ ಸಂಬಂಧಿಸಿ ನಡೆಯುತ್ತಿರುವ ಮಧ್ಯಸ್ಥಿಕೆ ಪ್ರಕ್ರಿಯೆಯ ಸ್ಥಿತಿಗತಿ ವರದಿಯನ್ನು ವಾರದೊಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ವಿವಾದವು ಸೌಹಾರ್ದಯುತವಾಗಿ ಪರಿಹಾರವಾಗದಿದ್ದರೆ ಇದೇ 25ರಿಂದ ಪ್ರಕರಣದ ವಿಚಾರಣೆಯನ್ನೂ ನಿತ್ಯವು ನಡೆಸಲಾಗುವುದು ಎಂದು ಹೇಳಿದೆ.
ಮಧ್ಯಸ್ಥಿಕೆ ಪ್ರಕ್ರಿಯೆಯಲ್ಲಿ ಏನೂ ಆಗುತ್ತಿಲ್ಲ, ಹಾಗಾಗಿ ಇದನ್ನು ರದ್ದು ಮಾಡಬೇಕು ಮತ್ತು ನ್ಯಾಯಾಂಗದಲ್ಲಿ ವಿಚಾರಣೆ ಆರಂಭಿಸಬೇಕು ಎಂದು ಕೋರಿ ಮೂಲ ಅರ್ಜಿದಾರರಲ್ಲಿ ಒಬ್ಬರ ಉತ್ತರಾಧಿಕಾರಿ ಗೋಪಾಲ್ ಸಿಂಗ್ ವಿಷಾರದ ಅವರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು ವಿಚಾರಣೆ ನಡೆಸಿತು.
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಐ ಖಲೀಫುಲ್ಲಾ ನೇತೃತ್ವದ ಮೂವರು ಸದಸ್ಯರ ಸಮಿತಿಯು ಇದೇ 18ರೊಳಗೆ ಸ್ಥಿತಿಗತಿ ವರದಿ ಸಲ್ಲಿಸಬೇಕು ಎಂದು ಪೀಠವು ಹೇಳಿದೆ. ಸೌಹಾರ್ದಯುತವಾದ ಪರಿಹಾರ ಸಾಧ್ಯವಿಲ್ಲ ಎಂಬುದು ಈ ಅರ್ಜಿಯ ಪರಿಶೀಲನೆಯಿಂದ ದೃಢಪಟ್ಟರೆ ನಿತ್ಯ ವಿಚಾರಣೆ ನಡೆಸುವ ನಿರ್ಧಾರಕ್ಕೆ ಬರಲಾಗುವುದು ಎಂದು ಪೀಠ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.