ಲಖನೌ: ಉತ್ತರಪ್ರದೇಶ ಲಖಿಂಪುರ್ ಖೇರಿ ಜಿಲ್ಲೆಯ ಇಸಾನಗರದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಪರಿಚಿತರು, ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.
‘ಅತ್ಯಾಚಾರಿಗಳು ಬಾಲಕಿಯ ಕಣ್ಣುಗಳನ್ನು ಕಿತ್ತು ಹಾಕಿ, ನಾಲಗೆಯನ್ನು ಕತ್ತರಿಸಿ ಹಾಕಿದ್ದಾರೆ’ ಎಂದು ಬಾಲಕಿಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.ಆದರೆ, ಇದನ್ನು ನಿರಾಕರಿಸಿರುವ ಪೊಲೀಸರು, ‘ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ದೇಹದ ಇತರೆಡೆ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ’ ಎಂದು ಹೇಳಿದ್ದಾರೆ.
ಲಖಿಂಪುರ ಖೇರಿಯ ಎಸ್ಪಿ ಸತ್ಯೇಂದ್ರ ಕುಮಾರ್ ಮಾತನಾಡಿ, ಕೊಲೆ ಮತ್ತು ಸಾಮೂಹಿತ ಅತ್ಯಾಚಾರ ಪ್ರಕರಣ ದಾಖಲಿಸಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಎನ್ಎಸ್ಎ ಅಡಿಯಲ್ಲಿ ಸಹ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
‘ಶುಕ್ರವಾರ ಸಂಜೆ ಬಾಲಕಿಯು ಬಹಿರ್ದೆಸೆಗೆಂದು ಹೊಲದ ಕಡೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯನ್ನು ಇಬ್ಬರು ವ್ಯಕ್ತಿಗಳು ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಹತ್ಯೆ ಮಾಡಿದ್ದಾರೆ. ಬಾಲಕಿ ಕೂಗಬಾರದೆಂದು ಅತ್ಯಾಚಾರಿಗಳು ಆಕೆಯ ಬಾಯಿಗೆ ಬಟ್ಟೆ ತುರುಕಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಲಕಿ ಮನೆಗೆ ಮರಳದ ಕಾರಣಕ್ಕೆ ಕುಟುಂಬದ ಸದಸ್ಯರು ಹುಡುಕಿದಾಗ ಬಾಲಕಿಯ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
‘ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀವ್ರವಾಗಿ ಹದಗೆಟ್ಟಿದೆ. ಈ ಆಡಳಿತದಲ್ಲಿ ಯಾರೂ ಸುರಕ್ಷಿತವಾಗಿಲ್ಲ’ ಎಂದು ಸಮಾಜವಾದ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ದೂರಿದ್ದಾರೆ.
ಪ್ರಿಯಾಂಕಾ ಟ್ವೀಟ್: ‘ಮಕ್ಕಳ ಮೇಲಿನ ಅಪರಾಧದ ವಿಷಯದಲ್ಲಿ ಉತ್ತರ ಪ್ರದೇಶವು ಅಗ್ರಸ್ಥಾನದಲ್ಲಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.