ನವದೆಹಲಿ: ‘2019ರ ಲೋಕಸಭೆ ಚುನಾವಣೆಯಿಂದ ಈ ವರ್ಷದ ಆರಂಭದಲ್ಲಿ ನಡೆದ ಐದು ರಾಜ್ಯಗಳ ಚುನಾವಣೆವರೆಗೆ ‘ದ್ವೇಷ ಹರಡುವ ಸುದ್ದಿ’ಗೆ ಸಂಬಂಧಿಸಿದ 130 ಪ್ರಕರಣಗಳು ವರದಿಯಾಗಿವೆ’ ಎಂದು ಕಾನೂನು ಸಚಿವ ಕಿರಣ್ ರಿಜಿಜು ರಾಜ್ಯಸಭೆಗೆ ಗುರುವಾರ ಲಿಖಿತ ಉತ್ತರ ನೀಡಿದ್ದಾರೆ.
‘ಹಿಂದಿನ ಐದು ವರ್ಷಗಳಲ್ಲಿ ನಡೆದ ಚುನಾವಣೆಗಳ ವೇಳೆ ದತ್ತಾಂಶ ಸೋರಿಕೆಯಾಗಿರುವ ಸಂಬಂಧ ಯಾವುದೇ ರಾಜಕೀಯ ಪಕ್ಷವೂ ದೂರು ನೀಡಿಲ್ಲ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ‘ದ್ವೇಷ ಹರಡುವ ಸುದ್ದಿ’ಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳೂ ಸಾಮಾಜಿಕ ಜಾಲತಾಣಗಳಲ್ಲೇ ವರದಿಯಾಗಿವೆ’ ಎಂದು ತಿಳಿಸಿದ್ದಾರೆ.
‘2019ರ ಲೋಕಸಭೆ ಚುನಾವಣೆ ವೇಳೆ 58, ಅದೇ ವರ್ಷ ನಡೆದಿದ್ದ ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಗಳ ವೇಳೆ ಒಂದು, 2020ರ ದೆಹಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 34, ಹೋದ ವರ್ಷ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿಗಳಲ್ಲಿ ನಡೆದಿದ್ದ ಚುನಾವಣೆ ವೇಳೆ 29 ಹಾಗೂ ಗೋವಾ, ಮಣಿಪುರ, ಪಂಜಾಬ್, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ಚುನಾವಣೆಗಳ ಸಂದರ್ಭದಲ್ಲಿ 8 ಪ್ರಕರಣಗಳು ವರದಿಯಾಗಿವೆ’ ಎಂದು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.