ಲಖನೌ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಹಿಂಸಾಚಾರ ಹಾಗೂ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 18 ಮಂದಿಯನ್ನು ಬಂಧಿಸಿದ್ದಾರೆ.
ಹಿಂಸಾಚಾರದಲ್ಲಿ ಭಾಗಿಯಾದವರನ್ನು ವಿಡಿಯೊ ದೃಶ್ಯಾವಳಿ ಸಹಾಯದಿಂದ ಗುರುತಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಿಎಸಿಯ 12 ತುಕಡಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಹೆಚ್ಚುವರಿ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು, ಪರಿಸ್ಥಿತಿ ಮೇಲೆ ನಿಗಾ ಇಡಲಾಗಿದೆ.
ಇತ್ತೀಚೆಗೆ ಟಿ.ವಿ ಸಂವಾದದಲ್ಲಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಾಗಿ ಆರೋಪಿಸಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಶುಕ್ರವಾರ ಕಾನ್ಪುರದ ವಿವಿಧ ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತು.
ಕಾನ್ಪುರದ ಪರೇದ್, ನಯಿ ಸಡಕ್ ಹಾಗೂ ಯತಿಂಖಾನಾ ಪ್ರದೇಶಗಳಲ್ಲಿ ಎರಡು ಕೋಮಿನ ನಡುವೆ ಘರ್ಷಣೆ ಉಂಟಾಗಿದೆ. ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸುವ ಯತ್ನ ಮತ್ತು ಕಲ್ಲು ತೂರಾಟ ನಡೆದಿದ್ದು, ಸುಧಾರಿತ ಬಾಂಬ್ ಪ್ರಯೋಗಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.