ನವದೆಹಲಿ (ಪಿಟಿಐ): 2 ಜಿ ಸ್ಪೆಕ್ಟ್ರಂ ಹಗರಣದಲ್ಲಿ ಕೇಂದ್ರದ ಗೃಹಖಾತೆ ಸಚಿವ ಪಿ ಚಿದಂಬರಂ ಅವರು ಪಾತ್ರದ ಕುರಿತು ತನಿಖೆ ನಡೆಸಬೇಕೆ? ಬೇಡವೆ? ಎಂಬುದನ್ನು ಈ ಹಗರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ತೀರ್ಮಾನಿಸಲಿ ಎಂದಿರುವ ಸುಪ್ರೀಂ ಕೋರ್ಟ್, ಅದೇ ಸಂದರ್ಭದಲ್ಲಿ ಈ ಹಗರಣದಲ್ಲಿನ ಚಿದಂಬರಂ ಅವರ ಪಾತ್ರದ ಬಗ್ಗೆ ಸಿಬಿಐಗೆ ತನಿಖೆ ನಡೆಸುವಂತೆ ನಿರ್ದೇಶನ ನೀಡಬೇಕೆಂಬ ಮನವಿಯನ್ನು ಗುರುವಾರ ತಳ್ಳಿಹಾಕಿದೆ.
2 ಜಿ ಹಗರಣದಲ್ಲಿ ಚಿದಂಬರಂ ಅವರ ಪಾತ್ರದ ಕುರಿತು ತನಿಖೆ ನಡೆಸುವಂತೆ ನಿರ್ದೇಶಿಸಬೇಕೆಂಬ ಜನತಾ ಪಕ್ಷದ ಮುಖ್ಯಸ್ಥ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಮತ್ತು ಎ.ಕೆ.ಗಂಗೂಲಿ ಅವರಿದ್ದ ಸುಪ್ರೀಂ ಕೋರ್ಟ್, ತನ್ನ ಈ ಆದೇಶ ವಿಚಾರಣೆ ನಡೆಯುತ್ತಿರುವ ನ್ಯಾಯಾಲಯದ ಕಲಾಪದ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಹೇಳಿದೆ.
ಈ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಎರಡು ವಾರಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿ ಎಂದೂ ಸುಪ್ರೀಂ ಕೋರ್ಟ್ ತಿಳಿಸಿದೆ.
ಗೃಹ ಸಚಿವ ಚಿದಂಬರಂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂಬ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿಯ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಓ.ಪಿ.ಸೈನಿ ಅವರು ನಡೆಸುತ್ತಿದ್ದಾರೆ. ಅವರು ಫೆ.4 ರಂದು ಈ ಸಂಬಂಧ ಆದೇಶ ನೀಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.