ಸಾಂದರ್ಭಿಕ ಚಿತ್ರ
ಬದೌನ್: ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಗುಡಿಸಲೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವಘಡದಲ್ಲಿ ಒಂದು ಕರು ಮೃತಪಟ್ಟಿದೆ ಎಂದು ಅವರು ಹೇಳಿದ್ದಾರೆ.
ಬದೌನ್ ಜಿಲ್ಲೆಯ ಜಿನ್ಸಿನಾಂಗ್ಲಾ ಗ್ರಾಮದ ಹೊರಗಿರುವ ಜೈಪಾಲ್ ಸಿಂಗ್ ಎಂಬುವವರಿಗೆ ಸೇರಿದ ಗುಡಿಸಲಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಸುತ್ತಮುತ್ತಲಿನ ಪ್ರದೇಶವನ್ನು ಆವರಿಸಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಕುರಿತು ಗ್ರಾಮಸ್ಥರು ಮಾಹಿತಿ ನೀಡಿದ್ದು, ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಿಯಂತ್ರಿಸಿದ್ದಾರೆ. ಆದರೆ, ಮನೆಯ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ ಎಂದು ಅವರು ಹೇಳಿದ್ದಾರೆ.
ಘಟನೆಯಲ್ಲಿ ಗುಡಿಸಲಿನ ಹೊರಗೆ ಆಟವಾಡುತ್ತಿದ್ದ ಸುಮಿತ್ (5) ಮತ್ತು ಆತನ ಸೋದರ ಸಂಬಂಧಿ ದೀಪಕ್ (6) ಎಂಬ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಂದು ಕರು ಸಾವಿಗೀಡಾಗಿದೆ.
ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.