ದೆಹಲಿ: ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಿರುದ್ಧದ 2009ರ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸೂಕ್ತ ನ್ಯಾಯಪೀಠದ ಮುಂದಿಡಲು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.
ಸೆ. 10ರಿಂದ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
2009ರ ಪ್ರಕರಣವು ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರಶಾಂತ್ ಭೂಷಣ್ ಅವರು ‘ತೆಹಲ್ಕಾ’ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿನ ಹೇಳಿಕೆಯ ಕುರಿತಾದದ್ದಾಗಿದೆ. ಇದರಲ್ಲಿ,ಸುಪ್ರೀಂ ಕೋರ್ಟ್ನ ಮಾಜಿ ಹಾಗೂ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಪ್ರಶಾಂತ್ ಭೂಷಣ್ ಆರೋಪ ಮಾಡಿದ್ದರು.
ನ್ಯಾಯಾಧೀಶರ ಭ್ರಷ್ಟಾಚಾರ ಆರೋಪಗಳನ್ನು ಯಾವುದೇ ವ್ಯಕ್ತಿ ಸಾರ್ವಜನಿಕರ ಮುಂದಿಡಬಹುದೇ ಎಂಬ ಅಂಶವೂ ಸೇರಿದಂತೆ ಈ ಪ್ರಕರಣದಲ್ಲಿ ಹಲವರು ಅಂಶಗಳನ್ನು ಪರಿಶೀಲಿಸಬೇಕಾಗಿದೆ. ಹೀಗಾಗಿ ಈ ಪ್ರಕರಣವನ್ನು ಸೂಕ್ತ ನ್ಯಾಯಪೀಠದ ಮುಂದಿಡಬೇಕು ಎಂದು ಸುಪ್ರೀಂ ಕೋರ್ಟ್, ಮುಖ್ಯನ್ಯಾಯಮೂರ್ತಿ ಎಸ್.ಎ ಬೋಬಡೆ ಅವರನ್ನು ಕೋರಿತು.
ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಪ್ರಕರಣವನ್ನು ಸೂಕ್ತ ನ್ಯಾಯಪೀಠಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿತು.
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್. ಗವಾಯಿ ಮತ್ತು ಕೃಷ್ಣ ಮುರಾರಿ ಅವರ ನ್ಯಾಯಪೀಠವು ಮಂಗಳವಾರ ಪ್ರಕರಣದ ವಿಚಾರಣೆ ಆರಂಭಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.