ADVERTISEMENT

ಮುಜಾಫರ್‌ನಗರ: 12 ಬಿಜೆಪಿ ನಾಯಕರ ವಿರುದ್ಧದ ಮೊಕದ್ದಮೆ ವಾಪಸ್‌ಗೆ ಕೋರ್ಟ್ ಅನುಮತಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 9:48 IST
Last Updated 27 ಮಾರ್ಚ್ 2021, 9:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಜಾಫರ್‌ನಗರ(ಉತ್ತರ ಪ್ರದೇಶ): 2013ರ ಮುಜಾಫರ್‌ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 12 ಬಿಜೆಪಿ ನಾಯಕರ ವಿರುದ್ಧ ದಾಖಲಾಗಿರುವ ಮೊಕದ್ದಮೆಯನ್ನು ಹಿಂಪಡೆಯಲು ಸ್ಥಳೀಯ ನ್ಯಾಯಾಲಯ ಅನುಮತಿ ನೀಡಿದೆ.

ಆ ಘಟನೆಯಲ್ಲಿ ಉತ್ತರ ಪ್ರದೇಶದ ಸಚಿವ ಸುರೇಶ್ ರಾಣಾ, ಬಿಜೆಪಿ ಶಾಸಕ ಸಂಗೀತ ಸೋಮ್, ಬಿಜೆಪಿಯ ಮಾಜಿ ಸಂಸದ ಭಾರ್ತೆಂಡು ಸಿಂಗ್ ಮತ್ತು ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಸೇರಿದಂತೆ 12 ಬಿಜೆಪಿ ನಾಯಕರ ವಿರುದ್ಧ ಮೊಕದ್ದಮೆ ದಾಖಲಾಗಿತ್ತು.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮ್‌ಸುಧಾ ಸಿಂಗ್ ಅವರು ಶುಕ್ರವಾರ ಈ ಪ್ರಕರಣವನ್ನು ಹಿಂಪಡೆಯಲು ಸರ್ಕಾರದ ಪರ ವಕೀಲರಿಗೆ ಅವಕಾಶ ನೀಡಿದರು.

ADVERTISEMENT

ಮೊಕದ್ದಮೆ ದಾಖಲಾಗಿರುವ ಬಿಜೆಪಿ ನಾಯಕರು, 2013ರ ಆಗಸ್ಟ್‌ ತಿಂಗಳ ಕೊನೆಯವರದಲ್ಲಿ ನಡೆದ ಮಹಾ ಪಂಚಾಯತ್‌ ನಲ್ಲಿ ಪಾಲ್ಗೊಂಡು ಹಿಂಸೆಗೆ ಪ್ರಚೋದನೆ ನೀಡುವಂತಹ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

ಸರ್ಕಾರಿ ವಕೀಲ ರಾಜೀವ್ ಶರ್ಮಾ ಪ್ರಕಾರ, ‘ಸರ್ಕಾರಿ ನೌಕರರು ತಮ್ಮ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದು ಮತ್ತು ಕಾನೂನು ನಿಯಮಗಳನ್ನು ಉಲ್ಲಂಘಿಸಿದ ಕಾರಣ, ಬಿಜೆಪಿ ನಾಯಕರ ವಿರುದ್ಧ ಐಪಿಸಿ ವಿವಿಧ ವಿಭಾಗಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು.

‘ಸಾರ್ವಜನಿಕ ಹಿತಾಸಕ್ತಿಯಿಂದಾಗಿ ಬಿಜೆಪಿ ಮುಖಂಡರ ವಿರುದ್ಧ ಕಾನೂನು ಕ್ರಮ ಜರುಗಿಸದಿರಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದ್ದು, ನ್ಯಾಯಾಲಯ, ಬಿಜೆಪಿ ನಾಯಕರ ವಿರುದ್ಧವಿರುವ ಪ್ರಕರಣವನ್ನು ಹಿಂಪಡೆಯಲು ಅನುಮತಿ ನೀಡಬೇಕು‘ ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು.

2013 ರಲ್ಲಿ ಮುಜಾಫರ್‌ನಗರ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ನಡೆದ ಕೋಮು ಸಂಘರ್ಷದಲ್ಲಿ ಕನಿಷ್ಠ 62 ಜನರು ಸಾವಿಗೀಡಾಗಿದ್ದರು. 50 ಸಾವಿರಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.