ಕೆವಾಡಿಯಾ(ಗುಜರಾತ್):ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯ ಹಿನ್ನೆಲೆಯಲ್ಲಿ ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್ ಇರುವುದು ಶುಕ್ರವಾರ ದೃಢಪಟ್ಟಿದೆ.
‘ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆಗಾಗಿ ವಿವಿಧ ಜಿಲ್ಲೆಗಳಿಂದ 5,000ಕ್ಕೂ ಅಧಿಕ ಪೊಲೀಸರು ಹಾಗೂ ಮೀಸಲು ಪಡೆಯ (ಎಸ್ಆರ್ಪಿ) ಸಿಬ್ಬಂದಿಯನ್ನು ಇಲ್ಲಿಗೆ ನಿಯೋಜಿಸಲಾಗಿತ್ತು. ಈ ಪೈಕಿ 3,651 ಪೊಲೀಸರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು 23 ಮಂದಿಗೆ ಸೋಂಕು ತಗುಲಿರುವುದು ಖಾತರಿಯಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಸೋಂಕಿತರನ್ನು ರಾಜಪಿಪ್ಲಾದಲ್ಲಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಪ್ರಕಟಣೆ ತಿಳಿಸಿದೆ.
ಗುಜರಾತ್ ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಮೋದಿ, ಶನಿವಾರ ಮಧ್ಯಾಹ್ನದವರೆಗೂ ಇಲ್ಲೇ ತಂಗಲಿದ್ದು, ಈ ಭಾಗಗಳ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.