ಚಂದನ್ನಗರ(ಪಶ್ಚಿಮ ಬಂಗಾಳ): ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಇಲ್ಲಿ ಆಯೋಜಿಸಿದ್ದ ಪಕ್ಷದ ರ್ಯಾಲಿಯಲ್ಲಿ ‘ದೇಶದ್ರೋಹಿಗಳ ಮೇಲೆ ಗುಂಡು ಹಾರಿಸಿ‘ (ಗೋಲಿ ಮಾರೋ..) ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಹೂಗ್ಲಿ ಜಿಲ್ಲೆಯ ಬಿಜೆಪಿ ಯುವ ಮುಖಂಡ ಸುರೇಶ್ ಸಾಹು ಸೇರಿದಂತೆ ಪಕ್ಷದ ಮೂವರು ಕಾರ್ಯಕರ್ತರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬುಧವಾರ ಹೂಗ್ಲಿ ಜಿಲ್ಲೆಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಈ ರೀತಿ ಘೋಷಣೆ ಕೂಗಿದ ಮೂವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಗುರುವಾರ ರಾತ್ರಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ. ಬಂಧಿತರನ್ನು ಇಂದು ನ್ಯಾಯಾಲಯದ ಎದುರು ಹಾಜರುಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೂಗ್ಲಿ ಕ್ಷೇತ್ರದ ಸಂಸದ ಲಾಕೆಟ್ ಚಟರ್ಜಿ ಮತ್ತು ರಾಜ್ಯಸಭಾ ಸದಸ್ಯ ಸ್ವಾಪನ್ ದಾಸ್ಗುಪ್ತಾ ಮತ್ತು ಸುವೇಂದು ಅಧಿಕಾರಿಯೊಂದಿಗೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವೇಳೆ, ಇವರ ಹಿಂದೆ ಬರುತ್ತಿದ್ದ ಕಾರ್ಯಕರ್ತರು ಇಲ್ಲಿನ ರಥಾಲಾ ಪ್ರದೇಶದಲ್ಲಿ ಬಿಜೆಪಿಯ ಧ್ವಜಗಳನ್ನು ಹಿಡಿದು ಘೋಷಣೆ ಕೂಗುತ್ತಿದ್ದರು.
‘ಬಿಜೆಪಿ ಧ್ವಜ ಹಿಡಿದು ಇಂಥ ಘೋಷಣೆಗಳನ್ನು ಕೂಗಿರುವ ವ್ಯಕ್ತಿಗಳನ್ನು ಪಕ್ಷ ಬೆಂಬಲಿಸುವುದಿಲ್ಲ‘ ಎಂದು ಬಿಜೆಪಿ ವಕ್ತಾರ ಸಮಿಕ್ ಭಟ್ಟಾಚಾರ್ಯ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.