ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಸೇನಾ ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
‘ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಬಳಿ ಇರುವ ಎಲ್ಒಸಿ ಮೂಲಕ ಉಗ್ರರು ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ್ದರು. ಮಧ್ಯರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ’ ಎಂದು ಸೇನೆಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
‘ಎಲ್ಒಸಿಯಿಂದ ಸುಮಾರು 3.5 ಕಿ.ಮೀ. ದೂರದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳನ್ನು ಗಮನಿಸಿದ ಬಿಎಸ್ಎಫ್ ಗಸ್ತು ಪಡೆ ಕೂಡಲೇ ಅಲ್ಲಿಗೆ ಧಾವಿಸಿತು. ರಾತ್ರಿ ಒಂದು ಗಂಟೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಯಿತು. ಈ ಸಂದರ್ಭದಲ್ಲಿ ಬಿಎಸ್ಎಫ್ ಯೋಧರೊಬ್ಬರೂ ಹುತಾತ್ಮರಾದರು. ಕೂಡಲೇ ಮತ್ತಷ್ಟು ಸೇನಾ ತುಕಡಿಗಳನ್ನು ಅಲ್ಲಿಗೆ ನಿಯೋಜಿಸಲಾಯಿತು. ಕಣ್ಗಾವಲು ಸಾಧನಗಳ ಮೂಲಕ ಉಗ್ರರು ಚಲನವಲನಗಳನ್ನು ಪತ್ತೆ ಹಚ್ಚಲಾಯಿತು. ಬೆಳಿಗ್ಗೆ ನಾಲ್ಕು ಗಂಟೆಯವರೆಗೂ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೆ ಮೂವರು ಯೋಧರು ಮಡಿದರು. ಇಬ್ಬರು ಗಾಯಗೊಂಡರು. ಗಾಯಗೊಂಡವರನ್ನು ಸ್ಥಳಾಂತರಿಸಲಾಯಿತು’ ಎಂದು ಶ್ರೀನಗರ ಮೂಲದ ರಕ್ಷಣಾ ವಿಭಾಗದ ಮಾಧ್ಯಮ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.