ಬೆಂಗಳೂರು: ಮೂವರು ವಿದ್ಯಾರ್ಥಿಗಳು ಕ್ಲಾಸ್ರೂಂನಲ್ಲಿ ಅಸಭ್ಯವಾಗಿ ನಡೆದುಕೊಂಡುಶಿಕ್ಷಕರೊಬ್ಬರ ಮೇಲೆ ಹಲ್ಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದ ವಿಡಿಯೊ ವೈರಲ್ ಆಗಿದ್ದು, ವಿದ್ಯಾರ್ಥಿಗಳ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಮಾದನೂರ್ ಎಂಬ ಗ್ರಾಮದ ಸರ್ಕಾರಿ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಪಾಠ ನಡೆಯುತ್ತಿರುವಾಗ ಸಂಜಯ್ ಗಾಂಧಿ ಎನ್ನುವ ಶಿಕ್ಷಕರೊಬ್ಬರು 12 ನೇ ತರಗತಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಮಾರಿ ಎನ್ನುವ ಹುಡುಗ ನಿದ್ದೆ ಮಾಡುತ್ತಿದ್ದದ್ದನ್ನು ಗಾಂಧಿ ಪ್ರಶ್ನಿಸಿದ್ದರು.
ಇದಕ್ಕೆ ಕುಪಿತಗೊಂಡ ಮಾರಿ ಹಾಗೂ ಆತನ ಸಂಗಡಿಗರು ಕ್ಲಾಸ್ ರೂಂನಲ್ಲೇ ಬಟ್ಟೆ ಬಿಚ್ಚಿ ಶಿಕ್ಷಕ ಗಾಂಧಿ ಅವರಿಗೆ ಧಮಕಿ ಕೊಟ್ಟಿದ್ದಾರೆ. ಅಲ್ಲದೇ ಹಲ್ಲೆಗೂ ಯತ್ನಿಸಿದ್ದಾರೆ.
ಘಟನೆ ಬೆಳಕಿಗೆ ಬಂದ ನಂತರ ಅಂಬೂರು ವಲಯದ ಪೊಲೀಸ್ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಅಮಾನತು ಮಾಡುವಂತೆ ತಾಕೀತು ಮಾಡಿದ್ದರು. ಇದರಿಂದ ಶಾಲಾ ಆಡಳಿತ ಮಂಡಳಿ ಮಾರಿ ಹಾಗೂ ಆತನ ಇಬ್ಬರು ಸ್ನೇಹಿತರನ್ನು ಅಮಾನತು ಮಾಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.