ನವದೆಹಲಿ: ಕಲೆ, ಸಂಸ್ಕೃತಿ, ಕ್ರೀಡಾ ಕ್ಷೇತ್ರಗಳಲ್ಲಿನ ಅಸಾಧಾರಣ ಸಾಧನೆ ಸೇರಿದಂತೆ ಸಾಮಾಜಿಕ ಸೇವೆ ಹಾಗೂ ಶೌರ್ಯ ಪ್ರದರ್ಶಿಸಿದ ವಿವಿಧ ರಾಜ್ಯಗಳ ಒಟ್ಟು 32 ಮಕ್ಕಳು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 21 ರಾಜ್ಯಗಳ 32 ಜಿಲ್ಲೆಗಳ ಮಕ್ಕಳು ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
‘ಕಲೆ ಮತ್ತು ಸಂಸ್ಕೃತಿ ವಿಭಾಗದಿಂದ ಏಳು, ಹೊಸ ಆವಿಷ್ಕಾರ ಕ್ಷೇತ್ರದಿಂದ ಒಂಬತ್ತು, ವಿದ್ವತ್ಪೂರ್ಣ ಸಾಧನೆಗಾಗಿ ಐದು ಪ್ರಶಸ್ತಿಗಳನ್ನು ನೀಡಲಾಗಿದೆ. ಕ್ರೀಡಾ ಕ್ಷೇತ್ರದಿಂದ ಏಳು ಮಕ್ಕಳು ಪ್ರಶಸ್ತಿ ಪಡೆದಿದ್ದಾರೆ. ಧೈರ್ಯ ಸಾಹಸ ಪ್ರದರ್ಶಿಸಿದ ಮೂವರು ಮಕ್ಕಳು ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಿಂದ ಒಬ್ಬರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ’ ಎಂದು ಸಚಿವಾಲಯವು ವಿವರಿಸಿದೆ.
ಯುವ ಸಾಧಕರನ್ನು ಶ್ಲಾಘಿಸಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ‘ಪ್ರಧಾನ ಮಂತ್ರಿ ಬಾಲ ಪುರಸ್ಕಾರ 2021 ವಿಜೇತರಿಗೆ ಪ್ರೇರಣೆ ನೀಡುವುದಲ್ಲದೆ, ಲಕ್ಷಾಂತರ ಚಿಕ್ಕ ಮಕ್ಕಳ ಕನಸು ಮತ್ತು ಆಶಯಗಳನ್ನು ವಿಸ್ತರಿಸಲು ಪ್ರೋತ್ಸಾಹಿಸುತ್ತದೆ. ನಮ್ಮ ರಾಷ್ಟ್ರವನ್ನು ಯಶಸ್ಸು ಮತ್ತು ಸಮೃದ್ಧಿಯ ಹೊಸ ಉತ್ತುಂಗಕ್ಕೆ ಕೊಂಡೊಯ್ಯಲು ನಾವೆಲ್ಲರೂ ನಮ್ಮ ವೈಯಕ್ತಿಕ ಪ್ರಯತ್ನವನ್ನು ಮಾಡೋಣ’ ಎಂದು ಸಂದೇಶ ನೀಡಿದ್ದಾರೆ.
ಬಾಲಪುರಸ್ಕಾರಕ್ಕೆ ಪಾತ್ರರಾಗಿರುವ ಮಕ್ಕಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.