ADVERTISEMENT

ಪಶ್ಚಿಮ ಬಂಗಾಳ ಫಲಿತಾಂಶದ ಬಳಿಕ 37 ಬಿಜೆಪಿ ಕಾರ್ಯಕರ್ತರ ಹತ್ಯೆ: ದಿಲೀಪ್ ಘೋಷ್

ಪಿಟಿಐ
Published 2 ಜೂನ್ 2021, 2:18 IST
Last Updated 2 ಜೂನ್ 2021, 2:18 IST
ದಿಲೀಪ್ ಘೋಷ್ (ಪಿಟಿಐ ಚಿತ್ರ)
ದಿಲೀಪ್ ಘೋಷ್ (ಪಿಟಿಐ ಚಿತ್ರ)   

ಲಖನೌ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ 37 ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ನಂತರದ ಸ್ಥಿತಿಗತಿ ಕುರಿತು ಪರಾಮರ್ಶೆ ನಡೆಸಲು ಉತ್ತರ ಪ್ರದೇಶ ಬಿಜೆಪಿ ಘಟಕದ ಜತೆ ಆಯೋಜಿಸಲಾಗಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ವರ್ಚುವಲ್ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಉಸ್ತುವಾರಿ ರಾಧಾಮೋಹನ್ ಸಿಂಗ್, ಬಿಜೆಪಿಯ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಭಾಗವಹಿಸಿದ್ದರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಪಕ್ಷದ ಉತ್ತರ ಪ್ರದೇಶ ಘಟಕದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳಿಗೆ ಘೋಷ್ ಕೃತಜ್ಞತೆ ಸಲ್ಲಿಸಿದ್ದು, ಇವರ ಶ್ರಮದಿಂದಾಗಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಪಕ್ಷವು 77 ಸ್ಥಾನಗಳನ್ನು ಗೆಲ್ಲುವಂತಾಗಿದೆ ಎಂದು ಹೇಳಿದ್ದಾರೆ.

ಕ್ರಾಂತಿಕಾರಿಗಳು, ಆಧ್ಯಾತ್ಮಿಕ ಮುಖಂಡರು, ಸಮಾಜ ಸುಧಾರಕರಿಂದ ಗುರುತಿಸಲ್ಪಟ್ಟಿರುವ ಪಶ್ಚಿಮ ಬಂಗಾಳವು ಇಂದು ದುರದೃಷ್ಟವಶಾತ್ ರಕ್ತಪಾತವನ್ನು ಎದುರಿಸುತ್ತಿದೆ ಎಂದು ಘೋಷ್ ಹೇಳಿದ್ದಾರೆ.

ಪಕ್ಷದ ಕೆಲಸಗಳಿಗಾಗಿ ಮನೆಯಿಂದ ತೆರಳುವ ಬಿಜೆಪಿ ಕಾರ್ಯಕರ್ತರಿಗೆ ತಾವು ಮನೆಗೆ ವಾಪಸಾಗುತ್ತೇವೆ ಎಂಬ ನಂಬಿಕೆ ಇರುವುದಿಲ್ಲ. ರಾಜ್ಯದಲ್ಲಿ ಅಂತಹ ಪರಿಸ್ಥಿತಿ ಇದೆ. ಕಳೆದ 5 ವರ್ಷಗಳಲ್ಲಿ 166 ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಐದು ವರ್ಷಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ 30,000ದಷ್ಟು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.