ತಿರುವನಂತಪುರಂ: ಮಹಿಳೆಯರು ಮತ್ತು ಮಕ್ಕಳು ಒಳಗೊಂಡಂತೆ ಕನಿಷ್ಠ 41 ಮಂದಿ ಮಲಯಾಳಿಗರು ತಾಲಿಬಾನ್ ನಿಯಂತ್ರಣದಲ್ಲಿರುವ ಕಾಬೂಲ್ನಲ್ಲಿ ಸಿಲುಕಿದ್ದಾರೆ ಎಂದು ಕೇರಳ ಸರ್ಕಾರ ಮಂಗಳವಾರ ತಿಳಿಸಿದೆ.
ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದೂ ಮನವಿ ಮಾಡಿದೆ. ಅನಿವಾಸಿ ಕೇರಳಿಗರ ಕಲ್ಯಾಣಕ್ಕೆ ಕೆಲಸ ಮಾಡುವ ಸರ್ಕಾರದ ಇಲಾಖೆ ‘ನೋಕ್ರಾ’ಗೆ ಬಂದಿರುವ ಆತಂಕಭರಿತ ದೂರವಾಣಿ ಕರೆಗಳ ಹಿನ್ನೆಲೆಯಲ್ಲಿ ಸರ್ಕಾರ, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆಯಲಾಗಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿರ್ದೇಶನದಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕೆ.ಎಳಂಗೋವನ್, ನೋಕ್ರಾ ಸಿಇಒ ಹರಿಕೃಷ್ಣನ್ ನಂಬೂಥಿರಿ ಅವರು ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪ್ರತ್ಯೇಕ ಪತ್ರ ಬರೆದಿದ್ದಾರೆ.
ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದವರು, ಮಹಿಳೆಯರು, ಮಕ್ಕಳು ಒಳಗೊಂಡು ಸುಮಾರು 41 ಮಂದಿ ಕಾಬೂಲ್ನಲ್ಲಿ ಸಿಲುಕಿದ್ದಾರೆ. ಅಲ್ಲಿ ಅತಂತ್ರರಾಗಿರುವ ಭಾರತೀಯರನ್ನು ಗುರುತಿಸಿ ತಾಲಿಬಾನಿಗಳು ಪಾಸ್ಪೋರ್ಟ್ ಮತ್ತು ಇತರೆ ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದೂ ಕೇಂದ್ರಕ್ಕೆ ಮಾಹಿತಿ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.