ಪೂಂಛ್ (ಜಮ್ಮು ಮತ್ತು ಕಾಶ್ಮೀರ): ‘ರಜೌರಿ ಸೆಕ್ಟರ್ನ ಬಿಂಬೇರ್ ಗಲಿ–ಪೂಂಛ್ ಮಾರ್ಗದಲ್ಲಿ ಗುರುವಾರ ಭಯೋತ್ಪಾದಕರು ಹೊಂಚು ಹಾಕಿ ನಡೆಸಿದ ದಾಳಿಯಲ್ಲಿ ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿಂದ ಐವರು ಸೈನಿಕರು ಅಸುನೀಗಿದ್ದಾರೆ. ಮತ್ತೊಬ್ಬ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದಾರೆ’ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ.
‘ಮೃತ ಯೋಧರೆಲ್ಲರೂ ರಾಷ್ಟ್ರೀಯ ರೈಫಲ್ಸ್ ಘಟಕಕ್ಕೆ ಸೇರಿದವರಾಗಿದ್ದಾರೆ. ಇವರು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ನಿಯೋಜನೆಗೊಂಡಿದ್ದರು’ ಎಂದು ಸೇನಾ ಪ್ರಕಟಣೆ ತಿಳಿಸಿದೆ.
‘ಘಟನಾ ಸ್ಥಳದ ಸನಿಹದಲ್ಲೇ ಅಡಗಿ ಕುಳಿತಿದ್ದ ಭಯೋತ್ಪಾದಕರು ಸೈನಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ್ದಾರೆ. ಅವರು ಗ್ರೆನೇಡ್ ಬಳಸಿರುವುದರಿಂದ ವಾಹನದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸೇನಾ ವಾಹನವು ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಾಗುತ್ತಿತ್ತು. ಭಾರಿ ಮಳೆ ಸುರಿಯುತ್ತಿದ್ದುದರಿಂದ ಆ ಪ್ರದೇಶದಲ್ಲಿ ಕಡಿಮೆ ಗೋಚರತೆ ಇತ್ತು. ಇದರ ಲಾಭ ಪಡೆದಿರುವ ಉಗ್ರರು ವಾಹನದ ಮೇಲೆ ದಾಳಿ ನಡೆಸಿದ್ದಾರೆ’ ಎಂದು ಮಾಹಿತಿ ನೀಡಿದೆ.
‘ಘಟನಾ ಸ್ಥಳದಿಂದ ಸೈನಿಕರೊಬ್ಬರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿರುವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಜೌರಿಯಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಘಟನೆಯ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.