ಪ್ರಾತಿನಿಧಿಕ ಚಿತ್ರ
ಗಾಜಿಯಾಬಾದ್: ಯೋಗಿ ಆದಿತ್ಯನಾಥ ಅವರು ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ ಪ್ರತಿನಿತ್ಯ ಅಂದಾಜು 50,000 ಗೋವುಗಳ ಹತ್ಯೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ನಂದ ಕಿಶೋರ್ ಗುಜಾರ್ ಇತ್ತೀಚೆಗೆ ಹಂಚಿಕೊಂಡಿದ್ದಾರೆ.
ಜಿಲ್ಲೆಯ ಲೋನಿ ಕ್ಷೇತ್ರದ ಶಾಸಕರಾಗಿರುವ ಅವರು, ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
'ನಮ್ಮ ಸರ್ಕಾರದ ಅಡಿಯಲ್ಲಿ ನಿತ್ಯವೂ 50,000 ಗೋವುಗಳನ್ನು ಹತ್ಯೆ ಮಾಡಲಾಗುತ್ತಿದೆ. ಗೋವುಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣವನ್ನು ಅಧಿಕಾರಿಗಳೇ ತಿನ್ನುತ್ತಿದ್ದಾರೆ. ಅಂದರೆ, ಎಲ್ಲೆಡೆ ಲೂಟಿಯಾಗುತ್ತಿದೆ. ಈ ವಿಚಾರವು ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಯವರನ್ನು ತಲುಪಬೇಕು' ಎಂದು ಹೇಳಿದ್ದಾರೆ.
ತಮ್ಮ ಮನವಿಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಆದೇಶದ ಮೇರೆಗೆ ಹೀಗೆ ಮಾಡಲಾಗುತ್ತಿದೆಯೇ ಎಂದು ಅಚ್ಚರಿಯಿಂದ ಕೇಳಿದ್ದಾರೆ.
ಲೋನಿಯಲ್ಲಿ ಇಬ್ಬರು ಹೆಡ್ಕಾನ್ಸ್ಟೆಬಲ್ಗಳು ಜನರನ್ನು ಸುಲಿಗೆ ಮಾಡುತ್ತಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆ ಕುರಿತೂ ಮಾತನಾಡಿದ ಶಾಸಕ, 'ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 375 ಸ್ಥಾನಗಳನ್ನು ಗೆಲ್ಲಲಿದೆ' ಎಂದು ಪ್ರತಿಪಾದಿಸಿದ್ದಾರೆ.
ಇಲ್ಲದಿದ್ದರೆ, ಪಕ್ಷದ ಹಲವು ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ 2027ರಲ್ಲಿ ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.