ನವದೆಹಲಿ: ಕಾಶ್ಮೀರದ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುವ ಪಾಕಿಸ್ತಾನದ ಜತೆ ಕ್ರಿಕೆಟ್ ಸರಣಿ ನಡೆಸುವುದು ಅಸಾಧ್ಯ ಎಂದು ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ತಿಳಿಸಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಮಾಲೋಚನಾ ಸಮಿತಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಯೋಧರನ್ನು ಹತ್ಯೆ ಮಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಸರಣಿ ನಡೆಸುವುದು ಸೂಕ್ತವಲ್ಲ. ಪಾಕಿಸ್ತಾನ ಭಯೋತ್ಪಾದನೆಗೆ ಅಂತ್ಯ ಹಾಡುವವರೆಗೂ ಆ ದೇಶದೊಂದಿಗೆ ಕ್ರಿಕೆಟ್ ಸರಣಿ ನಡೆಯದು ಎಂದು ಸುಷ್ಮಾ ಸ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
‘70 ವರ್ಷ ವಯಸ್ಸು ಮೀರಿದವರು, ಮಹಿಳೆಯರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಕೈದಿಗಳನ್ನು ಬಿಡುಗಡೆ ಮಾಡಲು ಪಾಕಿಸ್ತಾನ ಮುಂದಾಗಿದೆ ಎಂದು ಅಲ್ಲಿನ ವಿದೇಶಾಂಗ ಇಲಾಖೆಯ ಅಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ. ಮಾನವೀಯ ನೆಲೆಯಲ್ಲಿ ಕೈದಿಗಳನ್ನು ಪಾಕಿಸ್ತಾನ ಬಿಡುಗಡೆ ಮಾಡಲು ಮುಂದಾಗಿದೆ ಅಷ್ಟೇ’ ಎಂದು ಹೇಳಿದ್ದಾರೆ.
‘2017ರಲ್ಲಿ ಪಾಕಿಸ್ತಾನ 800 ಸಲ ಕದನ ವಿರಾಮ ಉಲ್ಲಂಘನೆ ಮಾಡಿದೆ. ಕುಲಭೂಷಣ್ ಯಾದವ್ ಅವರ ತಾಯಿ ಮತ್ತು ಪತ್ನಿ ಜತೆಯಲ್ಲಿ ಪಾಕಿಸ್ತಾನ ಅಸಭ್ಯವಾಗಿ ನಡೆದುಕೊಂಡಿದೆ. ಮೊನ್ನೆಯಷ್ಟೆ ಭಾರತೀಯ ಸೈನಿಕರನ್ನು ಹತ್ಯೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಸರಣಿ ಅನುಚಿತ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.