ADVERTISEMENT

ರಾಜ್ಯಸಭೆಯಲ್ಲಿ ‘ತಲಾಖ್‌’ ಜಟಾಪಟಿ

ಪಿಟಿಐ
Published 3 ಜನವರಿ 2018, 19:30 IST
Last Updated 3 ಜನವರಿ 2018, 19:30 IST
ರಾಜ್ಯಸಭೆಯಲ್ಲಿ ‘ತಲಾಖ್‌’ ಜಟಾಪಟಿ
ರಾಜ್ಯಸಭೆಯಲ್ಲಿ ‘ತಲಾಖ್‌’ ಜಟಾಪಟಿ   

ನವದೆಹಲಿ: ಮುಸ್ಲಿಂ ಮಹಿಳೆಯರ (ಮದುವೆ ಹಕ್ಕುಗಳ ರಕ್ಷಣೆ) ಮಸೂದೆ 2017 ರಾಜ್ಯಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಯಿತು.

ಮಸೂದೆಯನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಬೇಕು ಎಂದು ವಿರೋಧ ಪಕ್ಷಗಳು ಒಗ್ಗಟ್ಟಾಗಿ ಆಗ್ರಹಿಸಿದವು. ಕಾನೂನುಬಾಹಿರವಾಗಿ ತ್ರಿವಳಿ ತಲಾಕ್‌ ಪದ್ಧತಿ ಅನುಸರಿಸುವುದನ್ನು ತಪ್ಪಿಸಲು ಮಸೂದೆ ಶೀಘ್ರ ಅಂಗೀಕಾರವಾಗಬೇಕು ಎಂದು ಬಿಜೆಪಿ ಪ್ರತಿಪಾದಿಸಿತು.

ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಅವರು ಭಾರಿ ಗದ್ದಲದ ನಡುವೆಯೇ ಮಸೂದೆ ಮಂಡಿಸಿದರು. ವಿರೋಧ ಪಕ್ಷಗಳ ಗದ್ದಲಕ್ಕೆ ಅಷ್ಟೇ ಆಕ್ರೋಶಭರಿತರಾಗಿ ಆಡಳಿತ ಪಕ್ಷಗಳ ಸದಸ್ಯರೂ ಪ್ರತಿಕ್ರಿಯೆ ನೀಡಿದ್ದರಿಂದ ಕೋಲಾಹಲ ಸೃಷ್ಟಿಯಾಯಿತು. ಮಧ್ಯಾಹ್ನ ನಂತರ 3 ಗಂಟೆಗೆ ಮತ್ತೆ ಸದನ ಸೇರಿದಾಗಲೂ ಪರಿಸ್ಥಿತಿ ತಿಳಿಯಾಗಲಿಲ್ಲ.

ADVERTISEMENT

ತ್ರಿವಳಿ ತಲಾಖ್‌ ಮೂಲಕ ವಿಚ್ಛೇದನ ನೀಡುವ ಗಂಡನಿಗೆ ಮೂರು ವರ್ಷ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ಮಸೂದೆಗೆ ಕಳೆದ ಡಿಸೆಂಬರ್‌ 28ರಂದು ಲೋಕಸಭೆ ಅನುಮೋದನೆ ನೀಡಿದೆ.

ತ್ರಿವಳಿ ತಲಾಖ್‌ ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಈಗಾಗಲೇ ತೀರ್ಪು ನೀಡಿದೆ. ಹಾಗಾಗಿ ಮಸೂದೆಯನ್ನು ತುರ್ತಾಗಿ ಅಂಗೀಕರಿಸಬೇಕು ಎಂದು ಸರ್ಕಾರ ವಾದಿಸಿತು. ಆದರೆ, ಮಸೂದೆ ಸಿದ್ಧಪಡಿಸುವಾಗ ಸಂಬಂಧಪಟ್ಟವರ ಅಭಿಪ್ರಾಯ ಪಡೆದಿಲ್ಲ. ಹಾಗಾಗಿ ಮಸೂದೆಯನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದವು.

ಪರಿಶೀಲನಾ ಸಮಿತಿಗೆ ಒಪ್ಪಿಸಬೇಕು ಎಂಬ ಒತ್ತಾಯದ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸದೆ ಉಪಸಭಾಪತಿ ಪಿ.ಜೆ. ಕುರಿಯನ್‌ ಸದನವನ್ನು ಗುರುವಾರಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.