ADVERTISEMENT

ಸಾರ್ವಜನಿಕರಿಂದ ಹೆಚ್ಚುವರಿ ಹಣ ಸಂಗ್ರಹ: ಖರ್ಗೆ ಆರೋಪ

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 19:30 IST
Last Updated 4 ಜನವರಿ 2018, 19:30 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಕಡಿಮೆ ಮಾಡದೆ ಸಾರ್ವಜನಿಕರ ಹಣವನ್ನು ಹೆಚ್ಚುವರಿಯಾಗಿ ಸಂಗ್ರಹಿಸುತ್ತಿದೆ ಎಂದು ಕಾಂಗ್ರೆಸ್‌ ಗುಂಪಿನ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಲೋಕಸಭೆಯಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ನಂತರ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದೆ. ಆದರೂ ಕೇಂದ್ರ ಸರ್ಕಾರ ಡೀಸೆಲ್‌ ಮೇಲಿನ ಸುಂಕವನ್ನು ಶೇ 386ರಷ್ಟು, ಪೆಟ್ರೋಲ್‌ ಮೇಲಿನ ಸುಂಕವನ್ನು ಶೇ 126ರಷ್ಟು ಪ್ರಮಾಣದಲ್ಲಿ ಹೆಚ್ಚಿಸುವ ಮೂಲಕ ವಾರ್ಷಿಕ ₹ 1.62 ಲಕ್ಷ ಕೋಟಿ ಸಂಗ್ರಹಿಸುತ್ತಿದೆ ಎಂದು ದೂರಿದರು.

ಸುಂಕ ಸಂಗ್ರಹಿಸುವ ಮೂಲಕವೇ ಸರ್ಕಾರದ ಖಜಾನೆಗೆ ಇದುವರೆಗೆ ₹ 5.52 ಲಕ್ಷ ಕೋಟಿ ಆದಾಯ ಸಂಗ್ರಹವಾಗಿದ್ದರೂ, ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಅನುದಾನ ನೀಡಿಲ್ಲ. ಹೊಸದಾಗಿ ಯಾವುದೇ ರೀತಿಯ ಕಲ್ಯಾಣ ಯೋಜನೆಗಳನ್ನೂ ಜಾರಿಗೊಳಿಸಿಲ್ಲ ಎಂದು ಹೇಳಿದರು.

ADVERTISEMENT

ಸರ್ಕಾರಕ್ಕೆ ಸಾಕಷ್ಟು ಆದಾಯ ದೊರೆತಿದ್ದರೂ ಜನತೆಗೆ ಯಾವುದೇ ರೀತಿಯ ನೆರವು ದೊರೆತಿಲ್ಲ. ಮುಖ್ಯವಾಗಿ ದಲಿತ ಸಮುದಾಯಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲಾಗಿಲ್ಲ ಎಂದು ಅವರು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.