ನವದೆಹಲಿ : ಸೊಹ್ರಾಬುದ್ದೀನ್ ಶೇಖ್ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಎಚ್.ಲೋಯ ಅವರ ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ.
2014ರ ಡಿಸೆಂಬರ್ 1ರಂದು ಲೋಯ ಮೃತಪಟ್ಟಿದ್ದಾರೆ. ಅವರ ಸಾವಿನ ಬಗ್ಗೆ ತ್ವರಿತ ತನಿಖೆ ನಡೆಸಬೇಕು ಎಂದು ಮಹಾರಾಷ್ಟ್ರ ಪತ್ರಕರ್ತ ಬಿ.ಆರ್.ಲೋನ್ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಲೋಯ ವಿಚಾರಣೆ ನಡೆಸುತ್ತಿದ್ದ ಸೊಹ್ರಾಬುದ್ದೀನ್ ಎನ್ಕೌಂಟರ್ ಪ್ರಕರಣದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಪಿಗಳಾಗಿದ್ದರು. ಹಾಗಾಗಿ ಲೋಯ ಅವರ ನಿಗೂಢ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಲೋನ್ ಅವರು ಅರ್ಜಿಯಲ್ಲಿ ಹೇಳಿದ್ದಾರೆ.
ಈ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಎತ್ತಿಕೊಳ್ಳಲು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ನಿರ್ಧರಿಸಿದೆ.
ದ್ಯೋಗಿಯ ಮಗಳ ಮದುವೆಗೆಂದು ನಾಗಪುರಕ್ಕೆ ಹೋಗಿದ್ದಾಗ ಲೋಯ ಮೃತಪಟ್ಟಿದ್ದಾರೆ. ಅವರ ಸಾವಿನ ಸಂದರ್ಭದ ಬಗ್ಗೆ ಮತ್ತು ಅದಕ್ಕೆ ಸೊಹ್ರಾಬುದ್ದೀನ್ ಪ್ರಕರಣದ ಜತೆ ನಂಟು ಇರಬಹುದು ಎಂಬ ಬಗ್ಗೆ ಲೋಯ ಸಹೋದರಿ ಅನುಮಾನ ವ್ಯಕ್ತಪಡಿಸಿದ್ದು ಕಳೆದ ವರ್ಷ ಮಾಧ್ಯಮದಲ್ಲಿ ವರದಿಯಾಗಿತ್ತು. ಹೀಗಾಗಿ ಈ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ.
ಸೊಹ್ರಾಬುದ್ದೀನ್ ಶೇಖ್, ಅವರ ಪತ್ನಿ ಕೌಸರ್ ಬಿ ಮತ್ತು ಸಹವರ್ತಿ ತುಳಸಿದಾಸ್ ಪ್ರಜಾಪತಿಯನ್ನು 2005ರ ನವೆಂಬರ್ನಲ್ಲಿ ಗುಜರಾತ್ನಲ್ಲಿ ನಕಲಿ ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಒಟ್ಟು 23 ಆರೋಪಿಗಳಿದ್ದಾರೆ. ಪ್ರಕರಣವನ್ನು ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು. ವಿಚಾರಣೆಯನ್ನು ಮುಂಬೈಗೆ ಸ್ಥಳಾಂತರಿಸಲಾಗಿತ್ತು.
ಲೋಯ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಬಾಂಬೆ ವಕೀಲರ ಸಂಘ ಕೂಡ ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
</p></p>
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.