ADVERTISEMENT

ಲಾಲು ವಿರುದ್ಧ ಮೋದಿ ಗುಡುಗು

​ಪ್ರಜಾವಾಣಿ ವಾರ್ತೆ
Published 28 ಜನವರಿ 2018, 19:30 IST
Last Updated 28 ಜನವರಿ 2018, 19:30 IST

ನವದೆಹಲಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಸೇರಿರುವ ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಭಾನುವಾರ ಎನ್‌ಸಿಸಿ ಕೆಡೆಟ್‌ಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭ್ರಷ್ಟರು ಯಾರೇ ಆಗಿರಲಿ, ಎಷ್ಟೇ ಶ್ರೀಮಂತರು ಮತ್ತು ಪ್ರಭಾವಶಾಲಿಗಳಾಗಿರಲಿ ಅವರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಗುಡುಗಿದರು.

ಕಪ್ಪುಹಣ ಮತ್ತು ಭ್ರಷ್ಟಾಚಾರದ ವಿರುದ್ಧ ತಮ್ಮ ಸರ್ಕಾರ ನಡೆಸಿರುವ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ದೇಶದ ಯುವ ಜನರ ಉಜ್ವಲ ಭವಿಷ್ಯಕ್ಕಾಗಿ ಈ ಹೋರಾಟ ಮುಂದುವರಿಯಲಿದೆ ಎಂದರು.

ADVERTISEMENT

‘ಶ್ರೀಮಂತರು ಮತ್ತು ಪ್ರಭಾವಶಾಲಿಗಳು ಏನೇ ತಪ್ಪು ಮಾಡಿದರೂ ಅವರಿಗೆ ಏನೂ ತೊಂದರೆಯಾಗುವುದಿಲ್ಲ ಎಂದು ಈ ಮೊದಲು ಜನರು ಭಾವಿಸಿದ್ದರು. ಆದರೆ, ಈಗ ಕಾಲ ಬದಲಾಗಿದೆ. ಮುಖ್ಯಮಂತ್ರಿಗಳಾಗಿದ್ದವರು ಭ್ರಷ್ಟಾಚಾರಕ್ಕಾಗಿ ಜೈಲು ಸೇರಿದ್ದಾರೆ’ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್‌ ಮತ್ತು ಜಗನ್ನಾಥ್‌ ಮಿಶ್ರಾ ಹೆಸರನ್ನು ಪ್ರಸ್ತಾಪಿಸದೆ ಪರೋಕ್ಷ ವಾಗ್ದಾಳಿ ನಡೆಸಿದರು.

ಆಧಾರ್‌ ಬಲ : ಆಧಾರ್‌ ನೋಂದಣಿ ಈ ದೇಶದ ಅಭಿವೃದ್ಧಿಗೆ ಆನೆಬಲ ತಂದಿದೆ. ಸರ್ಕಾರದ ಹಣದ ಸೋರಿಕೆ ತಡೆಗಟ್ಟುವ ಮೂಲಕ ಅರ್ಹರಿಗೆ ಆ ಹಣ ತಲುಪಲು ನೆರವಾಗಿದೆ ಎಂದು ಮೋದಿ ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.