ನವದೆಹಲಿ : ಐಎನ್ಎಕ್ಸ್ ಮೀಡಿಯಾಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಗಾಗಿ ವಿಶೇಷ ನ್ಯಾಯಾಲಯ ಇಂದ್ರಾಣಿ ಮುಖರ್ಜಿ ಅವರನ್ನು ಎರಡು ದಿನ ಸಿಬಿಐ ವಶಕ್ಕೆ ಒಪ್ಪಿಸಿದೆ.
2007ರಲ್ಲಿ ಮಾರಿಷಸ್ನಿಂದ ಬಂಡವಾಳ ಸಂಗ್ರಹಿಸುವಾಗ ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯ (ಎಫ್ಐಪಿಬಿ) ನಿಯಮಾವಳಿಗಳ ಉಲ್ಲಂಘನೆ ಆಗಿದೆ ಎಂದು ಐಎನ್ಎಕ್ಸ್ ಮೀಡಿಯಾದ ಸಂಸ್ಥಾಪಕ ಪೀಟರ್ ಮುಖರ್ಜಿ ಹಾಗೂ ಅವರ ಹೆಂಡತಿ ಇಂದ್ರಾಣಿ ಅವರ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯವು ಪ್ರಕರಣ ದಾಖಲಿಸಿದೆ. ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿದೆ.
‘ಇಂದ್ರಾಣಿ ತನಿಖೆಗೆ ಅನುಮತಿ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸಾಕಷ್ಟು ದಾಖಲೆಗಳಿವೆ’ ಎಂದು ಸಿಬಿಐ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇಂದ್ರಾಣಿ ಅವರು ಮೊದಲ ಸಂಬಂಧದಲ್ಲಿ ಪಡೆದ ಮಗಳು ಶೀನಾ ಬೋರಾಳ ಕೊಲೆಗೆ ಪಿತೂರಿ ನಡೆಸಿದ ಪ್ರಕರಣದಲ್ಲಿಯೂ ಮುಖರ್ಜಿ ದಂಪತಿ ವಿಚಾರಣೆ ಎದುರಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.