ಲಖನೌ: ಉತ್ತರ ಪ್ರದೇಶದಲ್ಲಿ 10 ಮತ್ತು 12ನೇ ತರಗತಿಯ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ನಿಯಮಗಳನ್ನು ಅಳವಡಿಸಿದ್ದು, ನಾಲ್ಕು ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಗೈರಾಗಿದ್ದಾರೆ.
ಪರೀಕ್ಷೆಗಳಲ್ಲಿ ನಕಲು ತಡೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಕಠಿಣ ಕ್ರಮಗಳನ್ನು ರಾಜ್ಯದಾದ್ಯಂತ ಕೈಗೊಂಡಿರುವುದರ ಪರಿಣಾಮ ಇದಾಗಿದೆ. ಪರೀಕ್ಷೆಗಳು ಮಾರ್ಚ್ 12ರವರೆಗೂ ನಡೆಯಲಿವೆ.
ಪರೀಕ್ಷೆಗೆ ವಿದ್ಯಾರ್ಥಿಗಳ ಹೆಚ್ಚಿನ ಗೈರನ್ನು ಕಂಡು ಮುಂದಿನ ಪರೀಕ್ಷಾ ಪ್ರಕ್ರಿಯೆಗಳನ್ನು ಸರಳಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ‘ಎಕ್ಸಾಂ ವಾರಿಯರ್’ ಹಿಂದಿ ಅವತರಣಿಕೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಭಯ ಮೂಡಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಪರೀಕ್ಷಾ ಕ್ರಮಗಳನ್ನು ಸರಳಗೊಳಿಸಲು ಬೇಕಾದ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು. ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಸವಾಲಾಗಿ ನಿರ್ಮಾಣವಾಗದೆ ದೈನಂದಿನ ಪ್ರಕ್ರಿಯೆಯಂತೆ ನಡೆಯಬೇಕು ಎಂದು ತಿಳಿಸಿದರು.
ನಾಲ್ಕು ದಿನಗಳಿಂದ ಉತ್ತರಪ್ರದೇಶದಲ್ಲಿ ಬೋರ್ಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಗೆ ಭಯದಿಂದ ಸುಮಾರು 10 ಲಕ್ಷ ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಈ ಕುರಿತು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ‘ಪರೀಕ್ಷೆಗಳನ್ನು ಕಟ್ಟುನಿಟ್ಟಿನಿಂದ ನಡೆಸಲು ಸೂಚನೆ ನೀಡಲಾಗಿತ್ತು. ಆದರೆ, ಪರೀಕ್ಷಾ ಭಯಕ್ಕೆ ಹೆದರಿ 10 ಲಕ್ಷ ವಿದ್ಯಾರ್ಥಿಗಳು ಹಾಜರಾಗಿಲ್ಲ. ಇದು ಸದ್ಯದ ಅಂಕಿ ಅಂಶಗಳು ಮಾತ್ರ. ಆದರೆ, ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುವುದು ನನಗೂ ತಿಳಿದಿಲ್ಲ’ ಎಂದು ಹೇಳಿದರು.
ಇದೇ ವೇಳೆ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಒತ್ತಡ ಹಾಕದಂತೆ ಪೋಷಕರಿಗೆ ಸಿಎಂ ಯೋಗಿ ಕರೆ ನೀಡಿದ್ದಾರೆ.
ಕಳೆದ 10 ತಿಂಗಳಿನಲ್ಲಿ 6 ಲಕ್ಷ ವಿದ್ಯಾರ್ಥಿಗಳಿಗೆ ಕೌಶಲ ಅಭಿವೃದ್ಧಿ ತರಬೇತಿಯನ್ನು ನೀಡಲಾಗಿದೆ. 2.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. 1.4 ಲಕ್ಷ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ ನೀಡಲಾಗಿದೆ. ತಿಂಗಳಿಗೆ ಕನಿಷ್ಠ ₹14 ರಿಂದ ₹15 ಸಾವಿರ ಗಳಿಸಬಹುದು ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.