ರತ್ನಗಿರಿ: ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ರತ್ನಗಿರಿ ಜಿಲ್ಲೆಯಲ್ಲಿರುವತಿವಾರೆ ಅಣೆಕಟ್ಟು ಒಡೆದ ಪರಿಣಾಮ12 ಮನೆಗಳು ಕೊಚ್ಚಿಹೋಗಿದ್ದು 6 ಜನರು ಮೃತಪಟ್ಟಿದ್ದಾರೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತಿವಾರೆ ಅಣೆಕಟ್ಟು ಒಡೆದಿದೆ. ಇದರ ಸಮೀಪದಲ್ಲಿದ್ದ 12 ಮನೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಘಟನೆಯಲ್ಲಿ 6 ಜನರು ಮೃತಪಟ್ಟಿದ್ದು 20ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾಪತ್ತೆಯಾದವರ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಎನ್ಡಿಆರ್ಎಫ್ ತಂಡದ ಸದಸ್ಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮುಂಬೈ, ಪುಣೆ, ರತ್ನಗಿರಿ, ನಾಸಿಕ್, ಠಾಣೆ ಸೇರಿದಂತೆ ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು ಇಲ್ಲಿಯವರೆಗೂ35 ಮಂದಿ ಮೃತಪಟ್ಟಿದ್ದಾರೆ.ಮುಂಬೈನಲ್ಲಿ 21 ಮಂದಿ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ.
ಸೋಮವಾರ ರಾತ್ರಿ ಆರಂಭವಾದ ಮಳೆ ಮಂಗಳವಾರ ಬೆಳಗ್ಗಿನವರೆಗೆ ನಿಲ್ಲಲೇ ಇಲ್ಲ. ಹಾಗಾಗಿ ರೈಲು, ರಸ್ತೆ ಮತ್ತು ವಿಮಾನ ಸಂಚಾರ ಬಹುತೇಕ ಸ್ಥಗಿತವಾಗಿದೆ. ಬುಧವಾರವೂ ಭಾರಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಪಡ್ನಾವೀಸ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.