ಸಾಂದರ್ಭಿಕ ಚಿತ್ರ
ಜೈಪುರ: ನಗರದ ಸರ್ಕಾರಿ ಜೆಕೆ ಲೋನ್ ಆಸ್ಪತ್ರೆಯಲ್ಲಿ ತೀವ್ರ ಮೆದುಳು ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮನೆಯಲ್ಲಿ ಮಗುವಿಗೆ ಕೆಮ್ಮಿನ ಸಿರಪ್ ನೀಡಲಾಗಿತ್ತು ಎಂದು ಪೋಷಕರು ಹೇಳಿದ್ದಾರೆ.
‘ಮಗುವನ್ನು ಮೂರು ದಿನಗಳ ಕಾಲ ಚುರುವಿನ ಜೆಕೆ ಲೋನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸುವುದಕ್ಕೂ ಮೊದಲು ಮನೆಯಲ್ಲಿ ಕೆಮ್ಮಿನ ಸಿರಪ್ ನೀಡಲಾಗಿತ್ತು’ ಎಂದು ಪೋಷಕರು ತಿಳಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಶನಿವಾರ ಬೆಳಿಗ್ಗೆ 4 ಗಂಟೆಗೆ ಬಾಲಕ ಅನಸ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಮೆದುಳು ಜ್ವರದಿಂದ ಬಳಲುತ್ತಿದ್ದ ಮಗು ಆದೇ ದಿನ ಬೆಳಿಗ್ಗೆ 10 ಗಂಟೆ ಕೊನೆಯುಸಿರೆಳೆಯಿತು’ ಎಂದು ಅವರು ತಿಳಿಸಿದ್ದಾರೆ.
ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಒಟ್ಟು 11 ಮಕ್ಕಳು ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ ಮೃತಪಟ್ಟಿವೆ ಎಂದು ವರದಿಯಾದ ಬೆನ್ನಲ್ಲೇ ಈ ಪ್ರಕರಣ ಮುನ್ನೆಲೆಗೆ ಬಂದಿದೆ.
ರಾಜಸ್ಥಾನದ ಭರತ್ಪುರ ಮತ್ತು ಸಿಕಾರ್ನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧ ಯೋಜನೆಯಡಿಯಲ್ಲಿ ನೀಡಲಾದ ಕೆಮ್ಮಿನ ಸಿರಪ್ ಸೇವಿಸಿ ಇಬ್ಬರು ಮಕ್ಕಳು ಮೃತಪಟ್ಟಿವೆ ಎಂದು ಆರೋಪಿಸಲಾಗಿದೆ. ಆದಾಗ್ಯೂ, ಸರ್ಕಾರಿ ಪ್ರಯೋಗಾಲಯದಲ್ಲಿ ತಪಾಸಣೆ ನಡೆಸಿದ ಬಳಿಕ ಕೆಮ್ಮಿನ ಸಿರಪ್ ಸುರಕ್ಷಿತವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
‘ನಾವು ಔಷಧವನ್ನು ಎರಡು ಬಾರಿ ಪರಿಶೀಲಿಸಿದ್ದೇವೆ. ಔಷಧದಲ್ಲಿ ಯಾವುದೇ ಕಲಬೆರಕೆ ಅಥವಾ ದೋಷ ಕಂಡುಬಂದಿಲ್ಲ’ ಎಂದು ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ತಯಾರಕರ ವಿರುದ್ಧ ಅತ್ಯಂತ ಗಂಭೀರ ಅಪರಾಧಗಳ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣೆ ಇಲಾಖೆಗೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ಸಿಒ) ಪತ್ರ ಬರೆದಿದೆ ಎಂದು ಮೂಲಗಳು ತಿಳಿಸಿವೆ.
ತಮಿಳುನಾಡು, ತೆಲಂಗಾಣ ಹಾಗೂ ಕೇರಳದಲ್ಲಿ ‘ಕೋಲ್ಡ್ರಿಫ್’ ಸಿರಪ್ ಮಾರಾಟವನ್ನು ನಿಷೇಧಿಸಲಾಗಿದೆ. ಮಾರುಕಟ್ಟೆಯಿಂದ ಈ ಸಿರಪ್ ಅನ್ನು ಹಿಂಪಡೆಯುವಂತೆಯೂ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.