ADVERTISEMENT

ನಿಜಾಮುದ್ದೀನ್‌ ಮಸೀದಿ ಸಭೆಯಲ್ಲಿ ಭಾಗವಹಿಸಿದ್ದ 8 ಮಂದಿ ಬಿಜ್‌ನೋರ್‌ನಲ್ಲಿ ಪತ್ತೆ

ಪಿಟಿಐ
Published 31 ಮಾರ್ಚ್ 2020, 13:47 IST
Last Updated 31 ಮಾರ್ಚ್ 2020, 13:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಿಜ್‌ನೋರ್: ದೆಹಲಿಯ ನಿಜಾಮುದ್ದೀನ್‌ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಗೆ ಹಾಜರಾಗಿದ್ದ ಇಂಡೊನೇಷ್ಯಾದ 8 ಮಂದಿ ಇಸ್ಲಾಮಿಕ್ ಧರ್ಮ ಬೋಧಕರು ಮಂಗಳವಾರ ಇಲ್ಲಿನ ನಾಗಿನಾ ಬ್ಲಾಕ್‌ ಮಸೀದಿಯಲ್ಲಿ ಪತ್ತೆಯಾಗಿದ್ದಾರೆ. ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಎಂಟು ಮಂದಿ ಮಾರ್ಚ್‌ 13ರಂದು ನಡೆದ ಧಾರ್ಮಿಕ ಸಬೆಯಲ್ಲಿ ಭಾಗಿಯಾಗಿದ್ದರು. ಸದ್ಯ ಇವರನ್ನು ಐಸೋಲೇಷನ್ ಸೆಂಟರ್‌ಗೆ ಕಳುಹಿಸಲಾಗಿದೆ ಎಂದು ಬಿಜ್‌ನೋರ್ ಗ್ರಾಮಾಂತರ ಎಸ್‌ಪಿ ಸಂಜಯ್ ಸಿಂಗ್ ತಿಳಿಸಿದ್ದಾರೆ.

ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಒಡಿಶಾಕ್ಕೆ ತೆರಳಿದ್ದರು. ಅಲ್ಲಿಂದ ಬಿಜ್‌ನೋರ್‌ಗೆ ಬಂದಿದ್ದರು ಎಂಬುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಸಿಂಗ್ ಹೇಳಿದ್ದಾರೆ.

ಒಡಿಶಾದಲ್ಲಿ ನಿರ್ದಿಷ್ಟವಾಗಿ ಯಾವ ಪ್ರದೇಶಕ್ಕೆ ಭೇಟಿ ನೀಡಿದ್ದರು ಮತ್ತು ದೇಶದ ಇತರ ಪ್ರದೇಶಗಳಿಗೆ ತೆರಳಿದ್ದರೇ ಎಂಬುದನ್ನು ತಿಳಿಯಲು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಈ ವಿಚಾರಕ್ಕೆ ಸಂಬಂಧಿಸಿ ಮಸೀದಿಯ ಐವರು ವ್ಯಕ್ತಿಗಳ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 268 ಮತ್ತು 270 ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣಾ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದೂ ಸಿಂಗ್ ಮಾಹಿತಿ ನೀಡಿದ್ದಾರೆ.

ದೆಹಲಿ ನಿಜಾಮುದ್ದೀನ್‌ ಪ್ರದೇಶದಲ್ಲಿ ಮಾರ್ಚ್‌ 1ರಿಂದ 15ರ ವರೆಗೂ ನಡೆದ ತಬ್ಲಿಗಿ ಜಮಾಅತ್‌ ಧಾರ್ಮಿಕ ಸಭೆಯಲ್ಲಿ ಇಂಡೋನೇಷ್ಯಾ, ಮಲೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳಿಂದ 2,000ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು. ಸಭೆಗೆ ಹಾಜರಾಗಿದ್ದ ಹಲವರಲ್ಲಿ ಕೋವಿಡ್‌–19 ದೃಢಪಟ್ಟಿದೆ. ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಏಳು ಮಂದಿ ಸೋಮವಾರ ಹೈದರಾಬಾದ್‌ನಲ್ಲಿ ಸಾವಿಗೀಡಾಗಿದ್ದರು. ಶ್ರೀನಗರದಲ್ಲಿ ಒಬ್ಬ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.