ಭುವನೇಶ್ವರ: ದೇವಸ್ಥಾನದ ನಿಯಮಾವಳಿಗಳನ್ನು ಉಲ್ಲಂಘಿಸಿ ಪುರಿ ಜಗನ್ನಾಥ ಮಂದಿರ ಪ್ರವೇಶಿಸಿದ್ದಾರೆ ಎಂಬ ಆರೋಪದ ಮೇಲೆ ಬಾಂಗ್ಲಾದೇಶದ ಒಂಬತ್ತು ಮಂದಿಯನ್ನು ಒಡಿಶಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.
‘ಬಾಂಗ್ಲಾದೇಶದ ಹಿಂದೂಯೇತರರು ದೇವಸ್ಥಾನದ ನಿಯಮಗಳನ್ನು ಗಾಳಿಗೆ ತೂರಿ, ದೇವಸ್ಥಾನ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ನ ಕಾರ್ಯಕರ್ತರು ಸಿಂಘದ್ವಾರ್ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ಬಾಂಗ್ಲಾದೇಶದ ಒಂಬತ್ತು ಪ್ರವಾಸಿಗರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪುರಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಮಿಶ್ರಾ ತಿಳಿಸಿದ್ದಾರೆ.
ದೇಗುಲ ನಿಯಮದ ಪ್ರಕಾರ ಹಿಂದೂಯೇತರರಿಗೆ ದೇವಸ್ಥಾನ ಪ್ರವೇಶ ನಿಷಿದ್ಧ. ಒಂದು ವೇಳೆ ಇವರು ಹಿಂದೂಯೇತರರಾಗಿದ್ದರೆ, ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಾವು ವಶಕ್ಕೆ ಪಡೆದಿರುವ ಪ್ರವಾಸಿಗರ ಪಾಸ್ಪೋರ್ಟ್ಗಳನ್ನು ಪರಿಶೀಲಿಸಲಾಗಿದ್ದು, ಅವರಲ್ಲಿ ಒಬ್ಬ ಹಿಂದೂ ಎಂಬುದು ಗೊತ್ತಾಗಿದೆ. ಇತರರ ಪಾಸ್ಪೋರ್ಟ್ಗಳನ್ನು ಪರಿಶೀಲನೆಗೊಳಪಡಿಸಲಾಗುತ್ತಿದೆ. ಒಂಬತ್ತು ಮಂದಿ ಪೈಕಿ ನಾಲ್ವರು ದೇವಸ್ಥಾನ ಪ್ರವೇಶಿಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.