ಠಾಣೆ:ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮನ್ಸುಖ್ ಹಿರೇನ್ ಮೃತದೇಹ ಪತ್ತೆಯಾದ ಸ್ಥಳದಲ್ಲಿಯೇ ಮತ್ತೊಂದು ಮೃತದೇಹ ಪತ್ತೆಯಾಗಿದೆ.
ಮುಂಬ್ರಾದ ರೇತಿಬಂದರ್ ಪ್ರದೇಶದಲ್ಲಿ ಮನ್ಸುಖ್ ಹಿರೇನ್ ಮೃತದೇಹ ಪತ್ತೆಯಾದ ಸ್ಥಳದಲ್ಲೇ ಇನ್ನೊಂದು ಮೃತದೇಹ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಶೇಖ್ ಸಲೀಮ್ ಅಬ್ದುಲ್ (48) ಎಂಬುವವರ ಮೃತದೇಹ ಎಂದು ಪೊಲೀಸರು ಗುರುತಿಸಿದ್ದಾರೆ.
ಮುಂಬೈ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅಂಬಾನಿ ಮನೆ ಮುಂದೆ ಪತ್ತೆಯಾದ ಸ್ಫೋಟಕಗಳಿದ್ದ ಸ್ಕಾರ್ಪಿಯೊ ತಮ್ಮದು ಎಂದು ಠಾಣೆ ಮೂಲದ ವ್ಯಾಪಾರಿ ಮನ್ಸುಖ್ ಹಿರೇನ್ (45) ಹೇಳಿಕೊಂಡಿದ್ದರು. ತಮ್ಮ ವಾಹನ ಫೆ.18ರಂದು ಐರೋಲಿ–ಮುಲುಂದ್ ಸೇತುವೆ ಬಳಿಯಿಂದ ಕಳುವಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಮಾರ್ಚ್ 5ರಂದು ಹಿರೇನ್ ಅವರ ಮೃತ ದೇಹ ಪತ್ತೆಯಾಗಿತ್ತು.
ಈ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆಯುತ್ತಿದೆ. ಈಗಾಗಲೇ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಪೊಲೀಸ್ ಅಧಿಕಾರಿ ಸಚಿನ್ ವಾಜೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.