ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಭಾರತ–ಚೀನಾ ಗಡಿ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಭಾರಿ ನೀರ್ಗಲ್ಲು ಸ್ಫೋಟ ಸಂಭವಿಸಿದೆ.
ನೀರ್ಗಲ್ಲು ಸ್ಫೋಟ ಸಂಭವಿಸಿರುವ ಬಗ್ಗೆ ಗಡಿ ರಸ್ತೆ ಕಾರ್ಯಪಡೆಯ ಕಮಾಂಡರ್ ಕರ್ನಲ್ ಮನೀಶ್ ಕಪಿಲ್ ಮಾಹಿತಿ ನೀಡಿದ್ದಾರೆ ಎಂದು ‘ಎಎನ್ಐ’ ಟ್ವೀಟ್ ಮಾಡಿದೆ.
ಚಮೋಲಿಯ ನೀತಿ ಕಣಿವೆಯ ಸುಮ್ನಾ ಪ್ರದೇಶದಲ್ಲಿ ನೀರ್ಗಲ್ಲು ಸ್ಫೋಟ ಸಂಭವಿಸಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದು, ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಹೇಳಿದ್ದಾರೆ.
ಸಾವು–ನೋವು ಸಂಭವಿಸಿದ ಬಗ್ಗೆ ಈವರೆಗೆ ವರದಿಯಾಗಿಲ್ಲ.
ಫೆಬ್ರುವರಿಯಲ್ಲಿ ಚಮೋಲಿ ಜಿಲ್ಲೆಯ ಜೋಶಿಮಠ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಸಂಭವಿಸಿದ್ದ ನೀರ್ಗಲ್ಲು ಸ್ಫೋಟದಲ್ಲಿ 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ರಸ್ತೆ ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿ ಸಂಭವಿಸಿ ಅಪಾರ ಪ್ರಮಾಣದ ನಷ್ಟ ಉಂಟಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.