ADVERTISEMENT

ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ವಿಚಾರವಾಗಿ ಜಟಾಪಟಿ ತೀವ್ರ

‘ಇಂಡಿಯಾ: ದಿ ಮೋದಿ ಕ್ವಶ್ಚನ್‌’ ಪ್ರದರ್ಶಕ್ಕೆ ವಿದ್ಯಾರ್ಥಿ ಸಂಘಟನೆಗಳ ಪಟ್ಟು

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 21:18 IST
Last Updated 25 ಜನವರಿ 2023, 21:18 IST
ಸಾಕ್ಷ್ಯಚಿತ್ರ ಪ್ರದರ್ಶನ ತಡೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಎಸ್‌ಎಫ್‌ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯುತ್ತಿರುವುದು
ಸಾಕ್ಷ್ಯಚಿತ್ರ ಪ್ರದರ್ಶನ ತಡೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಎಸ್‌ಎಫ್‌ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯುತ್ತಿರುವುದು    

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು 2002ರ ಗೋಧ್ರಾ, ಗೋಧ್ರೋತ್ತರ ಹತ್ಯಾಕಾಂಡ ಗಳ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯ ಮತ್ತು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘಟನೆಗಳು ಮಂಗಳ ವಾರ ರಾತ್ರಿ ಮತ್ತು ಬುಧವಾರ ಪ್ರತಿಭಟನೆ ನಡೆಸಿವೆ.

ಪ್ರತಿಭಟನಾನಿರತರಾಗಿದ್ದ ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಪೊಲೀಸರ ಈ ಕ್ರಮವನ್ನು ವಿದ್ಯಾರ್ಥಿ ಸಂಘಟನೆಗಳುಖಂಡಿಸಿ, ಪ್ರತಿಭಟನೆ ನಡೆಸಿವೆ. ವಿದ್ಯಾರ್ಥಿಗಳನ್ನು
ವಶಕ್ಕೆ ಪಡೆದಿರುವ ಬಗ್ಗೆ ವಿಶ್ವವಿದ್ಯಾಲಯಗಳು ಯಾವುದೇ ಮಾಹಿತಿ ನೀಡಿಲ್ಲ. ಈ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ಪಶ್ಚಿಮ ಬಂಗಾಳದ ಇನ್ನೂ ಎರಡು ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘಟನೆಗಳು ಘೋಷಿಸಿವೆ.

ಕಾಂಗ್ರೆಸ್‌ ಹುದ್ದೆಗಳಿಗೆ ಅನಿಲ್ ಆ್ಯಂಟನಿ ರಾಜೀನಾಮೆ

ADVERTISEMENT

ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಎ.ಕೆ.ಆ್ಯಂಟನಿ ಅವರ ಪುತ್ರ ಅನಿಲ್ ಕೆ. ಆ್ಯಂಟನಿ, ಪಕ್ಷದ ವಿವಿಧ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅವರು ರಾಜೀನಾಮೆ ನೀಡಿಲ್ಲ.

ಅನಿಲ್ ಆ್ಯಂಟನಿ

ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಅನಿಲ್ ಟ್ವೀಟ್ ಮಾಡಿದ್ದರು. ಇದಕ್ಕೆ ಕಾಂಗ್ರೆಸ್‌ನಿಂದಲೇ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಅವರು, ಕೆಪಿಸಿಸಿ ಡಿಜಿಟಲ್‌ ಮಾಧ್ಯಮ, ಎಐಸಿಸಿ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಸಂವಹನ ಘಟಕಗಳ ಮುಖ್ಯಸ್ಥರ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಸಾಕ್ಷ್ಯಚಿತ್ರವನ್ನು ವಿರೋಧಿಸಿದ್ದಕ್ಕೆ ತಮಗೆ ಬೆದರಿಕೆ ಕರೆ ಮತ್ತು ಸಂದೇಶಗಳು ಬರುತ್ತಿವೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.