ADVERTISEMENT

ಆಧಾರ್ ಕಾರ್ಡ್‌ ಪೌರತ್ವಕ್ಕೆ ಪುರಾವೆಯಲ್ಲ: ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ

ಪಿಟಿಐ
Published 10 ಜುಲೈ 2025, 9:41 IST
Last Updated 10 ಜುಲೈ 2025, 9:41 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು (ಗುರುವಾರ) ಕೈಗೆತ್ತಿಕೊಂಡಿದೆ.

ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಆಧಾರ್ ಕಾರ್ಡ್ ಅನ್ನು ಏಕೆ ಪರಿಗಣಿಸುತ್ತಿಲ್ಲ ಎಂದು ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಚುನಾವಣಾ ಆಯೋಗವನ್ನು ಪ್ರಶ್ನಿಸಿತು.

ಈ ಕುರಿತು ಚುನಾವಣಾ ಆಯೋಗದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ‘ಆಧಾರ್ ಕಾರ್ಡ್ ಅನ್ನು ಪೌರತ್ವಕ್ಕೆ ಪುರಾವೆಯಾಗಿ ಪರಿಗಣಿಸುತ್ತಿಲ್ಲ. ಹಾಗೆಯೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಆಕ್ಷೇಪಣೆ ಹೊಂದಿರುವುದಾಗಿ’ ತಿಳಿಸಿದ್ದಾರೆ.

ADVERTISEMENT

ರಾಕೇಶ್ ದ್ವಿವೇದಿ ಜತೆಗೆ, ಹಿರಿಯ ವಕೀಲರಾದ ಕೆ.ಕೆ.ವೇಣುಗೋಪಾಲ್ ಮತ್ತು ಮಣಿಂದರ್ ಸಿಂಗ್ ಅವರು ಚುನಾವಣಾ ಆಯೋಗದ ಪರವಾಗಿ ವಾದ ಮಂಡಿಸಲಿದ್ದಾರೆ.

ಅರ್ಜಿದಾರರೊಬ್ಬರ ಪರ ಹಾಜರಿದ್ದ ಹಿರಿಯ ವಕೀಲ ಗೋಪಾಲ ಶಂಕರನಾರಾಯಣ, ‘ಬಿಹಾರದಲ್ಲಿ ಸುಮಾರು 8 ಕೋಟಿ ಮತದಾರರಿದ್ದಾರೆ. ಮತದಾರರ ಪಟ್ಟಿಯ ಪರಿಷ್ಕರಣೆಗೆ ಜನತಾ ಪ್ರಾತಿನಿಧ್ಯ ಕಾಯ್ದೆಯಡಿಯಲ್ಲಿ ಅನುಮತಿ ನೀಡಬಹುದಿತ್ತು. ಸದ್ಯ ಚುನಾವಣಾ ಆಯೋಗದ ಅಧಿಕಾರಿಗಳು ಆಧಾರ್‌ ಕಾರ್ಡ್‌ ಮತ್ತು ಮತದಾರ ಗುರುತಿನ ಚೀಟಿಯನ್ನು ದಾಖಲೆಯಾಗಿ ಸ್ವೀಕರಿಸುತ್ತಿಲ್ಲ’ ಎಂದಿದ್ದಾರೆ.

ಕಾಂಗ್ರೆಸ್‌ನ ಕೆ.ಸಿ. ವೇಣುಗೋಪಾಲ್, ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ, ಆರ್‌ಜೆಡಿ ಸಂಸದ ಮನೋಜ್‌ ಝಾ, ಸಮಾಜವಾದಿ ಪಕ್ಷದ ಹರಿಂದರ್ ಸಿಂಗ್ ಮಲಿಕ್, ಶಿವಸೇನಾ (ಯುಬಿಟಿ) ನಾಯಕ ಅರವಿಂದ್ ಸಾವಂತ್, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಅನೇಕರು ಆಯೋಗದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜೂನ್‌ 24ರಂದು ಚುನಾವಣಾ ಆಯೋಗ ಹೊರಡಿಸಿರುವ ಆದೇಶವು ಸಂವಿಧಾನದ 14, 21, 325 ಮತ್ತು 326ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. 1950ರ ಜನ ಪ್ರಾತಿನಿಧ್ಯ ಕಾಯ್ದೆ ಮತ್ತು 1960ರ ಮತದಾರರ ನೋಂದಣಿ ನಿಯಮಗಳ ನಿಯಮ 21ಎ ನಿಬಂಧನೆಯನ್ನೂ ಉಲ್ಲಂಘಿಸುತ್ತದೆ ಎಂದು ಅರ್ಜಿಗಳಲ್ಲಿ ವಾದಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.