ನವದೆಹಲಿ: 'ಕಾಶ್ಮೀರಿ ಪಂಡಿತ್ ಶಿಕ್ಷಕರ ಸಂಘ'ವು ಕಾಶ್ಮೀರಿ ವಲಸಿಗ(ಪಂಡಿತರು) ಶಿಕ್ಷಕರನ್ನು ಕಾಯಂಗೊಳಿಸುವ ವಿಚಾರದಲ್ಲಿ ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಎಎಪಿ ನಾಯಕರು ಪ್ರಶ್ನಿಸಿದ್ದಾರೆ.
ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ಶಿಕ್ಷಕರ ಉದ್ಯೋಗಗಳನ್ನು ಕಾಯಂಗೊಳಿಸಲು ನಿರಾಕರಿಸಿತ್ತು. ಈ ಕುರಿತು ಸುಪ್ರೀಂ ಕೋರ್ಟ್ನ ಆದೇಶ ಬಂದ ಬಳಿಕವೇ ಉದ್ಯೋಗಗಳನ್ನು ಕಾಯಂಗೊಳಿಸಲು ಸರ್ಕಾರ ಆದೇಶಿಸಿದೆ ಎಂದು ಕಾಶ್ಮೀರಿ ಪಂಡಿತ್ ಶಿಕ್ಷಕರ ಸಂಘ ದೂರಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಎಪಿ ಶಾಸಕ ಸೌರಭ್ ಭಾರದ್ವಾಜ್, ‘ದಿಲೀಪ್ ಭಾನ್(ಕಾಶ್ಮೀರಿ ವಲಸಿಗ) ಹೆಸರಿನಲ್ಲಿ ಬಿಜೆಪಿಯು ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಆದರೆ, ದಿಲೀಪ್ ಭಾನ್ ಎನ್ನುವ ಹೆಸರೇ ನಕಲಿಯಾಗಿದೆ. ಅವರು ಅಸ್ತಿತ್ವದಲ್ಲೇ ಇಲ್ಲ. ಈ ವಿಚಾರದಲ್ಲಿ ಬಿಜೆಪಿಯು ರಾಜಕೀಯ ಮಾಡುತ್ತಿದೆ. ಇದು ಬಿಜೆಪಿ ಮತ್ತು ಅದರ ನಾಯಕರ ನಿಜವಾದ ಮುಖ, ಅವರು ಸುಳ್ಳುಗಾರರು’ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.
‘ಇದೊಂದು ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಪ್ರಯತ್ನವಾಗಿದೆ. ಶಿಕ್ಷಕರನ್ನು ಕಾಯಂಗೊಳಿಸಲು ಎಎಪಿ ಸರ್ಕಾರ ನಿರ್ಧರಿಸಿತು. ಆದರೆ, ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಎಲ್ಜಿ ಇಲಾಖೆಯು ಇದನ್ನು ವಿರೋಧಿಸಿತು. ನಾವು ಹಲವು ಬಾರಿ ಪ್ರಯತ್ನ ಪಟ್ಟರೂ ಎಲ್ಜಿ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ’ ಎಂದು ಎಎಪಿ ಶಾಸಕಿ ಆತಿಶಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.