ADVERTISEMENT

ದೆಹಲಿ ಪುತ್ರನನ್ನು ಆಶೀರ್ವದಿಸಲು ರಾಮ್‌ಲೀಲಾ ಮೈದಾನಕ್ಕೆ ಬನ್ನಿ: ಮನೀಷ್‌ ಸಿಸೋಡಿಯ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 10:44 IST
Last Updated 12 ಫೆಬ್ರುವರಿ 2020, 10:44 IST
ಮನೀಷ್‌ ಸಿಸೋಡಿಯಾ
ಮನೀಷ್‌ ಸಿಸೋಡಿಯಾ   

ನವದೆಹಲಿ: ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಸೇರಿದಂತೆ ಎಎಪಿ ಸರ್ಕಾರದ ಎಲ್ಲ ಸಂಪುಟ ದರ್ಜೆ ಸಚಿವರು ಫೆಬ್ರುವರಿ 16ರಂದು ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ನಾಯಕ ಮನೀಷ್‌ ಸಿಸೋಡಿಯಾ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೊಂದಿಗೆ ಸಂಪುಟದ ಸಚಿವರೆಲ್ಲರೂಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮವು ಬೆಳಗ್ಗೆ 10 ಗಂಟೆಗೆ ರಾಮ್ ಲೀಲಾ ಮೈದಾನದಲ್ಲಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಅರವಿಂದ ಕೇಜ್ರಿವಾಲ್ ಅವರು ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇದಲ್ಲದೆ ಟ್ವೀಟ್ ಮಾಡಿರುವ ಸಿಸೋಡಿಯಾ, ದೆಹಲಿಯ ಪುತ್ರ ಅರವಿಂದ ಕೇಜ್ರಿವಾಲ್ ಮತ್ತು ಅವರ ನಾಯಕತ್ವದಲ್ಲಿ ಹೊಸ ಸರ್ಕಾರದ ಸಂಪುಟದ ಸಚಿವರು ಫೆ. 16ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 10 ಗಂಟೆಗೆ ಸರಿಯಾಗಿ ಎಲ್ಲರೂ ಬಂದು ನಿಮ್ಮ ಪುತ್ರನಿಗೆ ಆಶೀರ್ವದಿಸಿ ಮತ್ತು ಬೆಂಬಲಿಸಿ ಎಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ADVERTISEMENT

ಬಿಜೆಪಿಯ ಬಲಿಷ್ಠ ಪ್ರಚಾರದ ನಡುವೆಯೂ ದೆಹಲಿ ವಿಧಾನಸಭಾ ಚುನಾವಣೆಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಎಎಪಿಯು 5 ಸ್ಥಾನಗಳನ್ನು ಕಳೆದುಕೊಂಡಿದ್ದರೂ ಕೂಡ ಸರ್ಕಾರ ರಚನೆಗೆ ಯಾವುದೇ ಅಡ್ಡಿಯಿಲ್ಲ. ಇನ್ನು ಬಿಜೆಪಿಯು ಕಳೆದ ಬಾರಿಗಿಂತ 5 ಸ್ಥಾನಗಳಲ್ಲಿ ವಿಜಯ ಸಾಧಿಸುವ ಮೂಲಕ ಒಟ್ಟಾರೆ 8 ಸ್ಥಾನಗಳಲ್ಲಿ ಗೆದ್ದಿದೆ. ಕಳೆದ ಬಾರಿಯಂತೆ ಈ ಸಲವು ಕಾಂಗ್ರೆಸ್‌ ಶೂನ್ಯ ಸಂಪಾದನೆಗೆ ತೃಪ್ತಿಪಟ್ಟುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.