ನವದೆಹಲಿ: ಅಮೆರಿಕದ ಮಾರುಕಟ್ಟೆ ಸಂಶೋಧನಾ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ವರದಿಯಲ್ಲಿ ಅದಾನಿ ಸಮೂಹದ ವಂಚನೆ ಆರೋಪದ ಕುರಿತು ತನಿಖೆಗೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಬಿಜೆಪಿಯ ಪ್ರಧಾನ ಕಚೇರಿಯ ಎದುರುಗಡೆ ಭಾನುವಾರ ಪ್ರತಿಭಟನೆ ನಡೆಸಿದ್ದಾರೆ.
ವಿವಿಧ ಪಕ್ಷಗಳನ್ನು ಒಳಗೊಂಡಂತೆ ಜಂಟಿ ಸಂಸದೀಯ ಸಮಿತಿಯು (ಜೆಪಿಸಿ) ತನಿಖೆ ನಡೆಸಬೇಕು ಎಂದು ಪಕ್ಷದ ದೆಹಲಿ ಘಟಕದ ಸಂಚಾಲಕ ಗೋಪಾಲ್ ರೈ ಹೇಳಿದ್ದಾರೆ.
ತನಿಖೆಯಿಂದ ಬಿಜೆಪಿ ಪಲಾಯನಗೈಯುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮಾತ್ರ ಯಾವ ತನಿಖೆಯ ಬಗ್ಗೆಯೂ ಭಯ ಇರಲಿಲ್ಲ ಎಂದು ಅವರು ಹೇಳಿದರು.
ಅದಾನಿ ಸಮೂಹವು ಷೇರು ಬೆಲೆಯ ಮೇಲೆ ಕೃತಕವಾಗಿ ಪರಿಣಾಮ ಬೀರುವ ಕೆಲಸದಲ್ಲಿ ತೊಡಗಿಸಿಕೊಂಡಿದೆ ಮತ್ತು ಲೆಕ್ಕಪತ್ರಗಳ ವಂಚನೆಯಲ್ಲಿ ತೊಡಗಿದೆ ಎಂದು ಹಿಂಡನ್ಬರ್ಗ್ ರಿಸರ್ಚ್ ಆರೋಪಿಸಿದೆ. ವರದಿ ಬೆನ್ನಲ್ಲೇ ಅದಾನಿ ಸಮೂಹ ಕಂಪನಿಗಳ ಷೇರು ಮೌಲ್ಯ ಇಳಿಕೆ ಕಂಡಿತ್ತು.
ಸಂಸತ್ತಿನಲ್ಲೂ ವಿಪಕ್ಷಗಳು ಜೆಪಿಸಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಆಗ್ರಹಿಸಿತ್ತು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸುತ್ತಿರುವುದನ್ನು ವಿಪಕ್ಷ ನಾಯಕರು ಪ್ರಶ್ನಿಸಿದ್ದಾರೆ.
ಎಲ್ಐಐಸಿ, ಎಸ್ಬಿಐ ಸೇರಿದಂತೆ ಸಾರ್ವಜನಿಕ ಸಂಸ್ಥೆಗಳು, ಅದಾನಿ ಸಮೂಹದಲ್ಲಿ ಭಾರಿ ಹೂಡಿಕೆ ಮಾಡಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸೇರಿದ ಹಣದ ಹಗರಣದ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.