ನವದೆಹಲಿ: ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಬುಧವಾರ ಸಾವಿರಾರು ಮಂದಿ ಕಾರ್ಯಕರ್ತರು ರಾಷ್ಟ್ರೀಯ ಮುಖಂಡ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಎದುರು ಜಮಾಯಿಸಿದ್ದು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು.
ಡೋಳು, ತಮಟೆ, ಕಹಳೆಯೊಂದಿಗೆ ಕರೆಸಲಾಗಿದ್ದ ವಾದ್ಯವೃಂದದ ತಾಳಕ್ಕೆ ತಕ್ಕಂತೆ ನರ್ತಿಸಿ ತಮ್ಮ ಸಂತೋಷ ವ್ಯಕ್ತಪಡಿಸುತ್ತಿದ್ದರು. ಕೆಲ ಕಾರ್ಯಕರ್ತರಂತೂ ಕಲಾವಿದರು ಊದುತ್ತಿದ್ದ ವಾದ್ಯಗಳನ್ನುಕಿತ್ತುಕೊಂಡು ತಾವೇ ಊದುತ್ತಾ ನರ್ತಿಸುತ್ತಿದ್ದರು.
ಇದನ್ನು ಕಂಡ ಕೇಜ್ರಿವಾಲ್ ಕಾರ್ಯಕರ್ತರನ್ನು ಭೇಟಿ ಮಾಡಿದರಲ್ಲದೆ, ಕೈಬೀಸಿ ಸಂಭ್ರಮಾಚರಣೆಗೆ ಸಹಮತ ವ್ಯಕ್ತಪಡಿಸಿದರು.
ಇದೇ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದೇಶದಾದ್ಯಂತ ಗಮನ ಸೆಳೆದಿದ್ದ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 70 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು, 62 ವಿಧಾನಸಭಾ ಸ್ಥಾನಗಳನ್ನು ಗೆದ್ದುಕೊಂಡಿದೆ. ಆಮ್ ಆದ್ಮಿ ಪಕ್ಷದ ವಿರುದ್ಧ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಸೇರಿದಂತೆ ಸಂಪುಟದ ಎಲ್ಲಾ ಸಚಿವರು ಚುನಾವಣಾ ಕಣಕ್ಕಿಳಿದರೂ ಕೇವಲ 8 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.