ADVERTISEMENT

ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಮೂಲಭೂತ ಅಗತ್ಯ: ಸುಪ್ರೀಂ ಕೋರ್ಟ್‌

ಪಿಟಿಐ
Published 28 ಮಾರ್ಚ್ 2023, 14:15 IST
Last Updated 28 ಮಾರ್ಚ್ 2023, 14:15 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ‘ದೇಶದಲ್ಲಿ ಕೋಮು ಸಾಮರಸ್ಯ ಕಾಪಾಡುವ ದಿಸೆಯಲ್ಲಿ ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಮೂಲಭೂತ ಅಗತ್ಯವಾಗಿದೆ’ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್‌ ಹಾಗೂ ಬಿ.ವಿ.ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ದ್ವೇಷ ಭಾಷಣ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ನಡೆಸಿತು.

‘ಕೇವಲ ದೂರು ದಾಖಲಿಸುವುದರಿಂದ ದ್ವೇಷ ಭಾಷಣದ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ. ಎಫ್‌ಐಆರ್‌ಗಳಿಗೆ ಅನುಸಾರವಾಗಿ ಬೇರೆ ಯಾವುದಾದರೂ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ’ ಎಂದು ನ್ಯಾಯಪೀಠವು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರನ್ನು ಪ್ರಶ್ನಿಸಿತು.

ADVERTISEMENT

‘ದ್ವೇಷ ಭಾಷಣ ಸಂಬಂಧ ಈವರೆಗೂ ಒಟ್ಟು 18 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ’ ಎಂದು ಮೆಹ್ತಾ ಅವರು ನ್ಯಾಯಪೀಠಕ್ಕೆ ಹೇಳಿದರು.

ನ್ಯಾಯಪೀಠವು ಮೆಹ್ತಾ ಹಾಗೂ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ.ಎಂ.ನಟರಾಜ್‌ ಅವರ ಆಕ್ಷೇಪದ ನಡುವೆಯೂ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ದ್ವೇಷ ಭಾಷಣದ ವಿಚಾರದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಕಳೆದ ವರ್ಷದ ಅಕ್ಟೋಬರ್‌ 21ರಂದು ದೆಹಲಿ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ಸರ್ಕಾರಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಲಿ ಎಂದು ಕಾಯುತ್ತಾ ಕೂರದೇ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದೂ ನಿರ್ದೇಶಿಸಿತ್ತು.

ಅತ್ಯಂತ ಗಂಭೀರವೆನಿಸಿರುವ ಈ ವಿಚಾರದಲ್ಲಿ ತಪ್ಪಿತಸ್ಥರ ವಿರು‌ದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಆಡಳಿತವು ವಿಳಂಬ ಧೋರಣೆ ಅನುಸರಿಸಿದ್ದೇ ಆದಲ್ಲಿ ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ ಎಂದೂ ಎಚ್ಚರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.